ಬೆಳಗಾವಿ: ರಸ್ತೆ ನಿರ್ಮಾಣ ಸೇರಿದಂತೆ ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಎಲ್ಲ ಪ್ರಮುಖ ಕಾಮಗಾರಿಗಳನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ.ಅತೀಕ್ ಗಡುವು ನೀಡಿದ್ದಾರೆ.
ಸ್ಮಾರ್ಟ್ ಸಿಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾಮಗಾರಿಗಳು ನಿಧಾನಗತಿಯಲ್ಲಿ ನಡೆಯುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ. ಆದ್ದರಿಂದ ಕಾಮಗಾರಿಗಳನ್ನು ಚುರುಕುಗೊಳಿಸಿ ಮೂರು ತಿಂಗಳಿನಲ್ಲಿ ಪೂರ್ಣಗೊಳಿಸಬೇಕು. ಮಳೆಗಾಲಕ್ಕಿಂತ ಮುಂಚೆಯೇ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಸಾರ್ವಜನಿಕರ ಬಳಕೆಗೆ ಕಲ್ಪಿಸುವುದರಿಂದ ಅನುಕೂಲವಾಗುತ್ತದೆ. ಆದ್ದರಿಂದ ರಸ್ತೆ, ವಿದ್ಯುದ್ಧೀಕರಣ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.
ಘನತ್ಯಾಜ್ಯ ನಿರ್ವಹಣೆ- ವೈಜ್ಞಾನಿಕ ಪದ್ಧತಿ ಅಳವಡಿಕೆಗೆ ಸಲಹೆ:
ನಾಗಾಲೋಟದಲ್ಲಿ ಬೆಳೆಯುತ್ತಿರುವ ಬೆಳಗಾವಿ ನಗರದಲ್ಲಿ ಮುಂಬರುವ ದಿನಗಳಲ್ಲಿ ಘನತ್ಯಾಜ್ಯವನ್ನು ವೈಜ್ಞಾನಿಕ ವಿಧಾನದಲ್ಲಿ ಬಳಸಿಕೊಳ್ಳುವ ಕುರಿತು ಉಸ್ತುವಾರಿ ಕಾರ್ಯದರ್ಶಿ ಚರ್ಚೆ ನಡೆಸಿದರು.
ಆರಂಭಿಕ ಹಂತದಲ್ಲಿಯೇ ಕೀಟಗಳ ಲಾರ್ವಾ ಬಳಸಿಕೊಳ್ಳುವ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಕುರಿತು ಚರ್ಚೆ ನಡೆಸಿದ ಅವರು, ಈ ತಂತ್ರಜ್ಞಾನ ಅಳವಡಿಸಿಕೊಂಡರೆ ಹೋಟೆಲ್ ತ್ಯಾಜ್ಯ, ತರಕಾರಿ ಮತ್ತು ಮಾಂಸದ ತ್ಯಾಜ್ಯವನ್ನು ಕೂಡ ಸಮರ್ಪಕವಾಗಿ ನಿರ್ವಹಿಸಬಹುದು ಎಂದು ತಿಳಿಸಿದರು.