ಬೆಳಗಾವಿ: ಮತದಾನ ಕುರಿತು ಜಾಗೃತಿ ಮೂಡಿಸಲು ಬಿಮ್ಸ್ನ ವೈದ್ಯಕೀಯ ವಿದ್ಯಾರ್ಥಿಗಳು ನಿನ್ನೆ ರಾತ್ರಿ ಬಿಮ್ಸ್ ಆವರಣದಿಂದ ಕಿತ್ತೂರು ಚನ್ನಮ್ಮ ವೃತ್ತದವರೆಗೆ ಕ್ಯಾಂಡಲ್ ಮಾರ್ಚ್ ನಡೆಸಿದರು.
ಈ ವೇಳೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಉಪ ಪೊಲೀಸ್ ಆಯುಕ್ತ ಡಾ. ವಿಕ್ರಮ್ ಆಮಟೆ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರಶುರಾಮ್ ದುಡಗುಂಟಿ ಮತ್ತಿತರರು ಉಪಸ್ಥಿತರಿದ್ದರು.
ಡಿಸಿ ಸಭೆ...
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾರ್ತಾ ಇಲಾಖೆ ಆಶ್ರಯದಲ್ಲಿ ಲೋಕಸಭಾ ಉಪಚುನಾವಣೆ ಹಿನ್ನೆಲೆ ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ವಿಷಯಕ್ಕೆ ಸಂಬಂಧಿಸಿದಂತೆ ಎಲ್ಲ ಮುದ್ರಣ ಹಾಗೂ ಎಲೆಕ್ಟ್ರಾನಿಕ್ ಮಾಧ್ಯಮಗಳ ಪ್ರತಿನಿಧಿಗಳು/ಜಿಲ್ಲಾ ಹಾಗೂ ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರುಗಳ ಜೊತೆಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಡಾ.ಕೆ. ಹರೀಶಕುಮಾರ್ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್, ಚುನಾವಣೆ ಪಾರದರ್ಶಕವಾಗಿರಬೇಕು. ಇದಕ್ಕಾಗಿ ಮುದ್ರಣ ಮತ್ತು ದೃಶ್ಯ ಮಾಧ್ಯಮಕ್ಕೆ ಸಂಬಂಧಿಸಿ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ. ಅಭ್ಯರ್ಥಿಗಳಿಗೆ ಇರುವ ಪ್ರಚಾರದ ಚೌಕಟ್ಟನ್ನು ಬಿಟ್ಟು ಹೊರಗೆ ಚಟುವಟಿಕೆ ನಡೆದರೆ ನಿಗಾ ವಹಿಸಲಾಗುವುದು. ಜಾತಿ, ಕೋಮು ದ್ವೇಷ ಹುಟ್ಟುಹಾಕುವುದು, ಸಮಾಜದಲ್ಲಿ ಒಡಕು ಮೂಡಿಸುವುದು ಸೇರಿದಂತೆ ಹಲವು ನಿಯಮಗಳು ಇದರಲ್ಲಿ ಸೇರಿವೆ. ಮಾದರಿ ನೀತಿ ಸಂಹಿತೆ ಪಾಲಿಸಿ ಎಲ್ಲರೂ ಸಹಕರಿಸಬೇಕು ಎಂದರು.