ಬಳ್ಳಾರಿ: ಕೋವಿಡ್-19 ಹಿನ್ನೆಲೆ ಸಾರ್ವಜನಿಕರು ಮತ್ತು ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯ ವಿವಿಧೆಡೆ ನಡೆಯುವ ಜಾತ್ರಾ ಮಹೋತ್ಸವಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.
ಶ್ರೀ ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವ
ಮಾ.23 ರಿಂದ 30ರ ವರೆಗೆ ನಡೆಯುವ ಬಳ್ಳಾರಿಯ ಶ್ರೀ ಕನಕದುರ್ಗಮ್ಮ ಸಿಡಿಬಂಡಿ ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಶ್ರೀ ಉಡುಸಲಮ್ಮ ದೇವಿ ಮತ್ತು ಶ್ರೀ ಸುಂಕಲಮ್ಮ ಜಾತ್ರೆ
ಮಾ.09 ರಿಂದ 10ರ ವರೆಗೆ ನಡೆಯುವ ಕುರುಗೋಡು ತಾಲೂಕಿನ ವದ್ದಟ್ಟಿ ಮತ್ತು ಬಾದನಹಟ್ಟಿ ಗ್ರಾಮದ ಶ್ರೀ ಉಡುಸಲಮ್ಮ ದೇವಿ ಮತ್ತು ಸಿಂಧಿಗೇರಿ ಗ್ರಾಮದ ಸುಂಕಲಮ್ಮ ಜಾತ್ರೆಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಶ್ರೀ ತೇರು ಹನುಮಪ್ಪ ಸ್ವಾಮಿ ದೇವಸ್ಥಾನ ಜಾತ್ರೆ
ಮಾ.20ರಂದು ಹೂವಿನಹಡಗಲಿಯಲ್ಲಿ ನಡೆಯುವ ತೇರು ಹನುಮಪ್ಪ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.
ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ರಥೋತ್ಸವ
ಮಾ.27ರಿಂದ ಏ.10 ರವರೆಗೆ ನಡೆಯುವ ಕುರುಗೋಡಿನ ಶ್ರೀ ದೊಡ್ಡ ಬಸವೇಶ್ವರ ಸ್ವಾಮಿ ದೇವಸ್ಥಾನದ ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಹೇಳಿದ್ದಾರೆ.
ಸದರಿ ದೇವಸ್ಥಾನಗಳ ಆಡಳಿತ ಮಂಡಳಿಯವರು ದೇವಸ್ಥಾನಗಳಲ್ಲಿ ಕೋವಿಡ್ 19 ಮಾರ್ಗಸೂಚಿ ಅನ್ವಯ ಮುಂಜಾಗ್ರತಾ ಕ್ರಮ ವಹಿಸಿ ನಿತ್ಯದ ಪೂಜಾ ಧಾರ್ಮಿಕ ವಿಧಿ ವಿಧಾನಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ ಎಂದು ಡಿಸಿ ಆದೇಶದಲ್ಲಿ ತಿಳಿಸಿದ್ದಾರೆ.
ಜಾತ್ರಾ ಪ್ರದೇಶದಲ್ಲಿ, ರಸ್ತೆಯ ಬದಿಗಳಲ್ಲಿ, ಜಮೀನುಗಳಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ ಎಂದು ತಿಳಿಸಿರುವ ಅವರು, ಆದೇಶ ಉಲ್ಲಂಘಿಸಿದವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಸದರಿ ದೇವಸ್ಥಾನದ ಆಡಳಿತ ಮಂಡಳಿಗಳು, ಜಿಪಂ ಸಿಇಒ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೂವಿನಹಡಗಲಿ ಉಪವಿಭಾಗಾಧಿಕಾರಿಗಳು, ತಹಸೀಲ್ದಾರರು, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಡಿಸಿ ಸೂಚನೆ ನೀಡಿದ್ದಾರೆ.