ಹೊಸಪೇಟೆ: ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ದಿನದ 24 ಗಂಟೆಯೂ ಕೆಲಸ ನಿರ್ವಹಿಸಿದ ಹೊಸಪೇಟೆ, ಕಂಪ್ಲಿ, ಕಮಲಾಪುರದ 20 ಆಂಬ್ಯುಲೆನ್ಸ್ ಚಾಲಕರಿಗೆ ನಗರದ ತಾಲೂಕು ಕ್ರೀಡಾಂಗಣದಲ್ಲಿ ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ಸರಕಾರಿ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜೆಸಿಐ ಸಂಸ್ಥೆ ಜಂಟಿಯಾಗಿ ಚಾಲಕರನ್ನು ಸನ್ಮಾನಿಸಿದೆ.
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಶೇಕ್ ತನ್ವೀರ್ ಆಸೀಫ್ ಮಾತನಾಡಿ, ಆಂಬುಲೆನ್ಸ್ ಚಾಲಕರು ಎಲೆಮರೆ ಕಾಯಂತೆ ಕೆಲಸ ಮಾಡುತ್ತಿದ್ದರು. ಹಾಗಾಗಿ ಅವರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಕೊರೊನಾ ಸಂದರ್ಭದಲ್ಲಿ ಸತತ ಆರು ತಿಂಗಳಿಂದ 24 ಗಂಟೆ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ, ತುರ್ತು ಸಂದರ್ಭದಲ್ಲಿ ತುಂಬು ಗರ್ಭಿಣಿಯರು, ವೃದ್ಧರನ್ನು ವಾಹನದಲ್ಲಿ ಕರೆದುಕೊಂಡು ಹೋಗುವಾಗ ಜಾಗೃತಿ ವಹಿಸುತ್ತಾರೆ. ಅವರ ಸೇವೆ ಮೆಚ್ಚುವಂತದ್ದು. ಕೊರೊನಾ ಹಿನ್ನೆಲೆಯಲ್ಲಿ ಚಾಲಕರು ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಿಕೊಳ್ಳಬೇಕು ಎಂದು ಹೇಳಿದರು.