ಬಳ್ಳಾರಿ: ಅಧಿಕಾರಿಗಳು ಪ್ರತಿನಿತ್ಯ ನಿರ್ವಹಿಸಲಾಗುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು. ಕೊರೊನಾ ನೆಪ ಹೇಳಿಕೊಂಡು ಜವಾಬ್ದಾರಿಯಿಂದ ನುಣುಚಿಕೊಳ್ಳಬಾರದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದಸಿಂಗ್ ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಅಧಿಕಾರಿಗಳ ಸಭೆ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದಲ್ಲಿದ್ದು, ಸದ್ಯ 4,200 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ ಎಂದು ಹೇಳಿದರು.
ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸರ್ಕಾರ ಬಳ್ಳಾರಿಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಬದ್ಧವಾಗಿದೆ. ಯಾವ ಅನುದಾನ ಬಳಸಿಕೊಳ್ಳಬೇಕು ಎಂಬುದನ್ನು ಇನ್ನೊಂದು ವಾರದಲ್ಲಿ ಡಿಎಂಎಫ್ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಜಿಂದಾಲ್ ನಿಂದ ನೌಕರರನ್ನು ಕೆಲಸದಿಂದ ತೆಗೆಯಲಾಗುತ್ತಿದೆ ಎಂಬ ವಿಚಾರ ನಮ್ಮ ಗಮನಕ್ಕೆ ಬಂದಿದ್ದು, ಜಿಂದಾಲ್ ಅಧಿಕಾರಿಗಳನ್ನು ಕರೆದು ಚರ್ಚಿಸಿ ಕ್ರಮಕೈಗೊಳ್ಳಲಾಗುವುದು. ಜೊತೆಗೆ ಕಂಪ್ಲಿ ಸಕ್ಕರೆ ಕಾರ್ಖಾನೆಯ ಜಾಗ ಮಾರಾಟ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಸ್ಥಳೀಯ ಶಾಸಕ ಗಣೇಶ ಅವರ ಆರೋಪ ಸುಳ್ಳು ಎಂದರು.
ಈ ವೇಳೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಮತ್ತಿತರರು ಇದ್ದರು.