ಹೊಸಪೇಟೆ: ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಯಥವತ್ತಾಗಿ ಜಾರಿಗೊಳಿಸಲು ವಿಜಯನಗರ ಮಾದಿಗ ಸಮಾಜದ ವತಿಯಿಂದ ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.ವೂ
ಹುಬ್ಬಳ್ಳಿಯಲ್ಲಿ ಮಾದಿಗ ಬೃಹತ್ ಸಮಾವೇಶದಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಜಗದೀಶ್ ಶೆಟ್ಟರ್ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ ಅಧಿಕಾರ ಬಂದ ಬಳಿಕ ನೀಡಿದ ಭರವಸೆಯನ್ನು ಮರೆತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾದಿಗ ಸಮುದಾಯ ನಾಲ್ಕು ದಶಕಗಳಿಂದ ಒಳ ಮೀಸಲಾತಿಗೆ ಹೋರಾಟ ನಡೆಸುತ್ತಿದೆ. ಆಂಧ್ರ ಪ್ರದೇಶ, ತೆಲಂಗಾಣ, ತಮಿಳನಾಡು, ಪಂಜಾಬ್, ಕೇರಳ ರಾಜ್ಯಗಳಲ್ಲಿ ಮಾದಿಗ ಸಮುದಾಯ ಸರ್ವೋಚ್ಛ ನ್ಯಾಯಾಲಯದಲ್ಲಿ ಒಳ ಮೀಸಲಾತಿಗೆ ರಿವಿ-ಪಿಟಿಷನ್ ದಾಖಲು ಮಾಡಲಾಗಿದೆ. ಈ ಕುರಿತು ಮರು ಪರಿಶೀಲನೆ ಮಾಡಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ. ರಾಜ್ಯ ಸರಕಾರವು ಸುಪ್ರೀಂಕೋರ್ಟ್ ನಿರ್ದೇಶನದಂತೆ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಒಪ್ಪಿಕೊಂಡು ವಿಧಾನಸಭೆಯಲ್ಲಿ ಮಂಡಿಸಿ ಒಳಮೀಸಲಾತಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಆಗ್ರಹಿಸಿದರು.