ಬಳ್ಳಾರಿ: ಜಿಲ್ಲಾದ್ಯಂತ ಕಳೆದ ಮೂರು ವರ್ಷಗಳಲ್ಲಿ ಸಂಭವಿಸಿರುವ ಅಪಘಾತ ಪ್ರಕರಣಗಳು ಯಾವ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಗಿವೆ. ಅಪಘಾತ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡ ಕ್ರಮಗಳೂ ಸೇರಿದಂತೆ ರಸ್ತೆ ಸುರಕ್ಷತೆ ಸಂಬಂಧ ಸಮಗ್ರ ವರದಿಯನ್ನು ವಾರದೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಡಾ. ವಿ.ರಾಮಪ್ರಸಾತ್ ಮನೋಹರ ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಬಳ್ಳಾರಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿ, ರಸ್ತೆ ಸುರಕ್ಷತೆಯನ್ನು ವ್ಯವಸ್ಥಿತವಾಗಿ ಮತ್ತು ಅತ್ಯಂತ ಪರಿಣಾಮಕಾರಿಯಾಗಿ ವೈಜ್ಞಾನಿಕ ತಳಹದಿಯಲ್ಲಿ ಜಾರಿಗೊಳಿಸುವ ಉದ್ದೇಶದಿಂದ ಒಂದು ಸಮಗ್ರ ವರದಿ ರೂಪಿಸುವುದು ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ವರದಿಯನ್ನು ಸಿದ್ಧಪಡಿಸಿ ನೀಡಿ ಎಂದರು. ಪ್ರತಿ 4 ತಿಂಗಳಿಗೊಮ್ಮೆ ಸಭೆ ನಡೆಸಿ ಸಂಭವಿಸಿರುವ ಅಪಘಾತ ಮತ್ತು ಸಾವನ್ನಪ್ಪಿರುವ ಪ್ರಕರಣಗಳ ಕುರಿತು ಚರ್ಚಿಸಬೇಕು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮೀತಿ ಮೀರಿದ ವೇಗ ಹಾಗೂ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕ್ರಮಕೈಗೊಂಡು ಗಸ್ತು ಹೆಚ್ಚಿಸಬೇಕು. ರಸ್ತೆ ಸುರಕ್ಷತೆಗೆ ಸಂಬಂಧಿಸಿದ ಪರಿಕರಗಳನ್ನು 5 ವರ್ಷಗಳಲ್ಲಿ ಜಿಲ್ಲೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದರು. ಗುಡ್ಡಗಾಡು ರಸ್ತೆ, ಹಳ್ಳಕೊಳ್ಳಗಳ ಬದಿಯಿರುವ ರಸ್ತೆ ಹಾಗೂ ಅಪಘಾತ ವಲಯದ ರಸ್ತೆಗಳನ್ನು ಗುರುತಿಸಿ ಅಂತ ಸ್ಥಳಗಳಲ್ಲಿ ಹೆಚ್ಚಿನ ಬ್ಯಾರಿಕೇಡ್ಗಳ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.