ಬಳ್ಳಾರಿ: ವಿವಿಧ ಬೇಡಿಕೆ ಈಡೇರಿಸುವಂತೆ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನಾನಾ ಗಡಿಗ್ರಾಮಗಳಲ್ಲಿರುವ ಖಾಸಗಿ ಶಾಲೆ ತರಗತಿಗಳನ್ನು ಬಹಿಷ್ಕರಿಸಿ ಕೈಗೆ ಕಪ್ಪುಪಟ್ಟಿ ಧರಿಸಿ ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಸಿರುಗುಪ್ಪ ತಾಲೂಕಿನ ಖಾಸಗಿ ಶಾಲೆಯ ಮುಖ್ಯೋಪಾಧ್ಯಾಯರು ಮತ್ತು ಸಹ ಶಿಕ್ಷಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು.
ಕಲ್ಯಾಣ ಕರ್ನಾಟಕದಲ್ಲಿರುವ ಅನುದಾನ ರಹಿತ ಶಾಲೆಗಳಿಗೆ ಅಗತ್ಯ ಅನುದಾನ ನೀಡಬೇಕು. ಇಲ್ಲಿನ ಆರು ಜಿಲ್ಲೆಗಳಲ್ಲಿರುವ ಕನ್ನಡ ಮಾಧ್ಯಮ ಶಾಲೆಗಳನ್ನು ರಾಜ್ಯ ಸರ್ಕಾರ ಕಡೆಗಣಿಸುತ್ತಿದ್ದು, 1995 ರಿಂದ 2015ರವರೆಗೆ ಈ ಶಾಲೆಗಳಿಗೆ ವೇತನಾನುದಾನ ನೀಡಬೇಕೆಂದು ಹೋರಾಟ ನಡೆಸಿದ್ದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ ಎಂದು ಆರೋಪಿಸಿದರು.
ಇದಲ್ಲದೇ, ಕಲಂ 371 ಅಡಿಯಲ್ಲಿ 2013ರಿಂದ ಕಲ್ಯಾಣ ಕರ್ನಾಟಕದ ಕನ್ನಡ ಶಾಲೆಗಳನ್ನು ನಿರ್ಲಕ್ಷ್ಯ ಧೋರಣೆಯಿಂದ ಕಾಣಲಾಗುತ್ತಿದ್ದು, ಅನುದಾನ ರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಒಕ್ಕೂಟದವರು ಶಾಲೆಗಳಿಗೆ ಅನುದಾನಬೇಕೆಂದು ಒತ್ತಾಯಿಸಿದ್ದರೂ ಕೂಡ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಪ್ರತಿಭಟನಾ ನಿರತರು ಆರೋಪಿಸಿದರು.
ಇದನ್ನೂ ಓದಿ: ಮೈಲಾರ ಕಾರ್ಣಿಕೋತ್ಸವ : ಹೊರಗಿನ ಭಕ್ತರಿಗೆ ಪ್ರವೇಶ ನಿರ್ಬಂಧ!