ಬಸವಕಲ್ಯಾಣ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಅಂಗೀಕರಿಸಿ ಕೂಡಲೇ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು, ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ವರದಿ ಜಾರಿ ಹೊರಾಟ ಸಮನ್ವಯ ಸಮಿತಿ ಒತ್ತಾಯಿಸಿದೆ.
ಕರ್ನಾಟಕ ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ಜನಸಂಖ್ಯೆಯಂತೆ ಒಳಮೀಸಲು ವರ್ಗೀಕರಿಸಿ ಸಾಮಾಜಿಕ ನ್ಯಾಯವನ್ನು ನೀಡುವಲ್ಲಿ ಹಿಂದಿನ ಸರ್ಕಾರಗಳು ವಿಫಲವಾಗಿವೆ. ಈಗ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಸದಾಶಿವ ವರದಿ ಅಂಗೀಕರಿಸಿ ಕೇಂದ್ರಕ್ಕೆ ಶಿಫಾರಸು ಮಾಡಲು ಮುಂದಾಗಬೇಕು ಎಂದು ಹೊರಾಟ ಸಮನ್ವಯ ಸಮಿತಿ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ರಾಜ್ಯ ಕಾರ್ಯಾಧ್ಯಕ್ಷ ಅಂಬಣ್ಣಾ ಆರೋಲಿಕರ ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪನವರ ನೇತೃತ್ವದ ಸರ್ಕಾರ ಸಕಾರಾತ್ಮಕವಾಗಿ ಬೆಂಬಲಿಸುತ್ತದೆಂಬ ವಿಶ್ವಾಸವನ್ನು ಹೊಂದಿದ್ದೇವೆ. ಕಾರಣ ನೂತನ ಬಿಜೆಪಿ ಸರ್ಕಾರದಲ್ಲಿ ಎಡಗೈ ಸಮುದಾಯದ ಗೋವಿಂದ ಕಾರಜೋಳ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಗೌರವಿಸಿದ್ದರಿಂದ ಸಮಸ್ತ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳು ಬಿಜೆಪಿ ಅಭಿನಂದಿಸುತ್ತದೆ. ಮುಂದೆ ನಡೆಯುವ 17 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವು ಆಗಬೇಕೆಂದರೆ ನಮ್ಮ ಬೇಡಿಕೆಗಳನ್ನ ಸರ್ಕಾರ ಈಡೇರಿಸಬೇಕು ಎಂದರು.
ಇನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ತೆರಳಿ ಸಭೆ ನಡೆಸಿ ಸಮಿತಿಯ ಉದ್ದೇಶಗಳನ್ನು ಸರ್ಕಾರಕ್ಕೆ ಮನವರಿಕೆ ಮಾಡುತ್ತೇವೆ ಎಂದರು.