ಬೀದರ್: ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವುದರ ನಡುವೆ ಜಿಲ್ಲಾಡಳಿತ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ವಹಿಸಿಕೊಂಡು ಸ್ವಾತಂತ್ರ್ಯ ದಿನದ ಸಂಭ್ರಮಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.
ಜಿಲ್ಲಾಡಳಿತದ ಪೊಲೀಸ್ ಪರೇಡ್ ಮೈದಾನದಲ್ಲಿ ಬೆಳಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಿದ್ದಾರೆ. ಈ ವೇಳೆಯಲ್ಲಿ ಅತಿ ಹೆಚ್ಚು ಜನರನ್ನು ಸೇರಿಸದಂತೆ ಸೂಚಿಸಲಾಗಿದೆ. 150 ಜನರಿಗೆ ಮಾತ್ರ ಆಮಂತ್ರಣ ಪತ್ರಿಕೆ ನೀಡಲಾಗಿದ್ದು, ಮೈದಾನವನ್ನು ಕಾರ್ಯಕ್ರಮ ಆರಂಭಕ್ಕೂ ಮುನ್ನ ಸ್ಯಾನಿಟೈಸ್ ಮಾಡುವುದು, ಥರ್ಮಲ್ ಸ್ಕ್ಯಾನಿಂಗ್, ಸಾಮಾಜಿಕ ಅಂತರ, ಕಡ್ಡಾಯ ಮಾಸ್ಕ್ ಧರಿಸುವುದು ಸೇರಿದಂತೆ ಒಂದು ಆ್ಯಂಬುಲೆನ್ಸ್, ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ಇರುವುದು, ಪರೇಡ್ನಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗಳ ಆರೋಗ್ಯ ತಪಾಸಣೆ ಮಾಡುವುದಲ್ಲದೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ತಿಳಿಸಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಮಕ್ಕಳು ಭಾಗವಹಿಸುವಂತಿಲ್ಲ:
ಜಿಲ್ಲೆಯಾದ್ಯಂತ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದ ಘಳಿಗೆಯಲ್ಲಿ ಸ್ಥಳೀಯ ಸರ್ಕಾರಿ, ಖಾಸಗಿ ಶಾಲೆಗಳಲ್ಲಿ ಮಕ್ಕಳು ಭಾಗವಹಿಸದಂತೆ ನೋಡಿಕೊಳ್ಳಬೇಕು, ಶಿಕ್ಷಕರು, ಪೋಷಕರು, ಸ್ಥಳೀಯ ಮುಖಂಡರು ಮಾತ್ರ ಕೊರೊನಾ ನಿಯಂತ್ರಣ ಮುನ್ನೆಚ್ಚರಿಕೆ ವಹಿಸಿಕೊಂಡು ಭಾಗವಹಿಸುವಂತೆ ಸೂಚಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಸಿ. ಚಂದ್ರಶೇಖರ್ ಅವರು ತಿಳಿಸಿದ್ದಾರೆ.