ಬಸವಕಲ್ಯಾಣ: ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡುವಾಗ ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಬೇಕು. ಕಾರ್ಮಿಕರಿಗೆ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಬೇಕು ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜ್ಞಾನೇಂದ್ರಕುಮಾರ ಗಂಗವಾರ ಸೂಚಿಸಿದರು.
ತಾಲೂಕಿನ ಹಿರನಾಗಾಂವ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ ಕಾರ್ಮಿಕರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು. ತಾಲೂಕಿನ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೆಲಸ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಇಒ ಅವರಿಗೆ ಸೂಚಿಸಿದರು.
ಹಿರನಾಗಾಂವನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕೆಲಸ ಮಾಡುತ್ತಿರುವದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಬಡ ಕೂಲಿ ಕಾರ್ಮಿಕರ ಕುಟುಂಬಗಳಿಗೆ ಉದ್ಯೋಗ ಕಲ್ಪಿಸುವದೇ ನರೇಗಾ ಯೋಜನೆಯ ಮೂಲ ಉದ್ದೇಶವಾಗಿದೆ. ಕೂಲಿ ಹಣವು ಹೆಚ್ಚಿಸಲಾಗಿದೆ. ಕಾರ್ಮಿಕರು ಕೆಲಸ ವೇಳೆ ಬಳಸುವ ಪರಿಕರಗಳ ನಿರ್ವಹಣೆಗಾಗಿ ತಲಾ 10 ರೂ. ನೀಡಲಾಗುತ್ತಿದೆ ಎಂದು ತಿಳಿಸಿದರು.
ಕೊರೊನಾ ಹರಡದಂತೆ ತಡೆಗಟ್ಟಲು ಜಾರಿಯಲ್ಲಿರುವ ಲಾಕ್ಡೌನ್ ಆದೇಶದಿಂದಾಗಿ ಸಮಸ್ಯೆಗೆ ಸಿಲುಕಿರುವ ಕಾರ್ಮಿಕರಿಗೆ ಉದ್ಯೋಗ ಕಲ್ಪಿಸವ ಉದ್ದೇಶದಿಂದ ನರೇಗಾ ಯೋಜನೆಯಡಿ ಎಲ್ಲ ಗ್ರಾಪಂ ವ್ಯಾಪ್ತಿಯಲ್ಲಿ ಕೆಲಸ ಆರಂಭಿಸಲು ಸೂಚಿಸಲಾಗಿದೆ. ಕುಡಿಯುವ ನೀರಿನ ಸಮಸ್ಯೆಯಾಗಂತೆ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಅಗತ್ಯವಿರುವ ಕಡೆ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗುವದು ಎಂದರು.
ಹಿರನಾಗಾಂವ್ ಗ್ರಾಮದ ಕೆರೆ ಹೂಳೆತ್ತುವ ಕೆಲಸದಲ್ಲಿ 280 ಜನ, ಬೋಸ್ಗಾನಲ್ಲಿ ಕೆರೆ ಹೂಳೆತ್ತುವಲ್ಲಿ 105ಜನ ಹಾಗೂ ಮಂಠಾಳನಲ್ಲಿ ನಾಲಾದಲ್ಲಿ ಹೂಳೆತ್ತುವ ಕೆಲಸದಲ್ಲಿ 110 ಜನ ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕೆಲಸದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ತಾಪಂ ಇಒ ಮಡೋಳಪ್ಪ ಪಿಎಸ್ ಸಿಒ ಅವರಿಗೆ ಮಾಹಿತಿ ನೀಡಿದರು.