ಬೀದರ್: ಮಹಾರಾಷ್ಟ್ರದಿಂದ ವಲಸೆ ಬಂದ ಜನರಿಂದಾಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗಿ ಹರಡುತ್ತಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ಹೇಳಿದ್ದಾರೆ.
ನಗರದ ಗಾಂಧಿಗಂಜ್ ಎಪಿಎಂಸಿ ಮಾರುಕಟ್ಟೆಯಲ್ಲಿ ಕೊರೊನಾ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅತ್ತ ತೆಲಂಗಾಣ ಇತ್ತ ಮಹಾರಾಷ್ಟ್ರ ಹೀಗೆ ಎರಡು ರಾಜ್ಯಗಳಿಂದ ವಾಪಸ್ ಬಂದ ಜನರಲ್ಲಿ ಸೋಂಕು ವ್ಯಾಪಕವಾಗಿ ಕಂಡು ಬಂದಿದೆ. ಕಳೆದ ಮೂರು ದಿನಗಳಲ್ಲಿ 23 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ಎಲ್ಲರೂ ಜಾಗೃತರಾಗಿರಬೇಕು ಎಂದು ಸೂಚಿಸಿದರು.
ಎಪಿಎಂಸಿ ಮಾರುಕಟ್ಟೆಯಲ್ಲಿ ಕೆಲಸ ಮಾಡುವವರು ಸಾಕಷ್ಟು ಜನರಿಗೆ ನೇರ ಸಂಪರ್ಕಕ್ಕೆ ಬರುತ್ತೀರ. ಹೀಗಾಗಿ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಿ, ಇದರಿಂದ ಸೋಂಕು ದೇಹ ಸೇರುವುದಿಲ್ಲ. ಅಲ್ಲದೆ ಅನುಮಾನ ಬಂದರೆ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್. ಮಾತನಾಡಿ, ಜಿಲ್ಲೆಯಲ್ಲಿ ಪರಿಸ್ಥಿತಿ ಕೈಮೀರಿದೆ. ಈ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮ ವಹಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಸಲಹೆ ನೀಡಿದರು.