ಬಸವಕಲ್ಯಾಣ(ಬೀದರ್) : ಪರಿಸರ ಸಂರಕ್ಷಣೆಯಿಂದ ಮಾತ್ರ ಆರೋಗ್ಯ ಪೂರ್ಣ ಸಮಾಜ ನಿರ್ಮಾಣ ಸಾಧ್ಯ. ತಾಲೂಕಿನಲ್ಲಿ ಲಕ್ಷ ಸಸಿ ನೆಡುವ ಗುರಿ ಹೊಂದಲಾಗಿದೆ. ಹಸಿರಿನಿಂದ ಕೂಡಿದ ಸುಂದರ ಪರಿಸರ ಸಂರಕ್ಷಣೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಅರಣ್ಯ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಬಿ ನಾರಾಯಣರಾವ್ ಹೇಳಿದರು.
ಕವಡಿಯಾಳ ಕ್ರಾಸ್ ಸಮೀಪದ ಸಾಲುಮರದ ತಿಮ್ಮಕ್ಕ ಮಕ್ಕಳ ಉದ್ಯಾನವನದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಉದ್ಯಾನವನದಲ್ಲಿ ಕುಡಿಯುವ ನೀರು, ವಾಕಿಂಗ್ ಟ್ರ್ಯಾಕ್, ಕಾರಂಜಿ ಸೇರಿ ಇತರ ಸೌಲಭ್ಯಗಳಿಗೆ ಕೆಕೆಆರ್ಡಿಬಿಯಿಂದ 50 ಲಕ್ಷ ರೂ. ಅನುದಾನ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಶಾಲೆ ಹಾಗೂ ಸರ್ಕಾರಿ ಕಚೇರಿಯ ಸುತ್ತ ಖಾಲಿ ಇರುವ ಸ್ಥಳಗಳಲ್ಲಿ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಪರಿಸರ ಸಂರಕ್ಷಣೆ ಮಾಡಬೇಕು. ಮನುಷ್ಯನ ಜೀವನಕ್ಕೆ ಅಗತ್ಯವಾದ ಪರಿಸರದ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ತಮ್ಮ ಮನೆ ಮತ್ತು ತಾವಿರುವ ಪರಿಸರದಲ್ಲಿ ಸಸಿಗಳನ್ನು ನೆಡುವ ಜತೆಗೆ ಅವುಗಳನ್ನು ಜೋಪಾನವಾಗಿ ಬೆಳೆಸುವಲ್ಲಿ ಪ್ರತಿಯೊಬ್ಬರು ಕಾಳಜಿ ವಹಿಸಬೇಕಾದ ಅವಶ್ಯಕತೆ ಇದೆ ಎಂದರು.
ಈ ವೇಳೆ ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ್, ಪರಿಸರವಾದಿ ಶೈಲೇಂದ್ರ ಕಾವಡಿ, ತಹಶೀಲ್ದಾರ್ ಸಾವಿತ್ರಿ ಶರಣು ಸಲಗರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.