ಬಸವಕಲ್ಯಾಣ : ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ಕಾರಣ ವಿದ್ಯಾರ್ಥಿಗಳ ಪಾಲಕರು ಹಾಗೂ ಕಾಲೇಜು ಆಡಳಿತ ಮಂಡಳಿ ಮಧ್ಯೆ ಕೆಲ ಕಾಲ ವಾಗ್ವಾದ ನಡೆದು, ಕಾಲೇಜಿನ ತರಗತಿಗಳಿಗೆ ದಿಢೀರ್ ರಜೆ ಘೋಷಿಸಿದ ಘಟನೆ ನಗರದ ಎಸ್.ಎಸ್.ಕೆ.ಬಿ ಕಾಲೇಜಿನಲ್ಲಿ ಇಂದು ನಡೆದಿದೆ.
ಕಾಲೇಜಿನಲ್ಲಿ ಬಿಎ, ಬಿಎಸ್ಸಿ ಸೇರಿದಂತೆ ವಿವಿಧ ಪದವಿ ಹಂತದಲ್ಲಿ ಓದುತ್ತಿರುವ ಮುಸ್ಲಿಂ ಧರ್ಮದ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಇಂದು ಬೆಳಗ್ಗೆ ಕಾಲೇಜಿಗೆ ಆಗಮಿಸಿದ್ದಾರೆ. ಹಿಜಾಬ್ ಧರಿಸಿ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸುತ್ತಿದ್ದಂತೆ ಕಾಲೇಜಿನ ಆಡಳಿತ ಮಂಡಳಿಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ, ಕಾಲೇಜಿನಲ್ಲಿ ಯಾವುದೇ ಧರ್ಮದ ಧಾರ್ಮಿಕ ಸಂಕೇತ ಸೂಚಿಸುವ ಸಮವಸ್ತ್ರ ಧರಿಸಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.
ಈ ವಿಷಯ ಅರಿತ ವಿದ್ಯಾರ್ಥಿನಿಯರ ಕೆಲ ಪಾಲಕರು ಕಾಲೇಜಿಗೆ ಧಾವಿಸಿದ್ದಾರೆ. ಆಡಳಿತ ಮಂಡಳಿ ಆಕ್ಷೇಪಣೆಯನ್ನು ತೀವ್ರವಾಗಿ ವಿರೋಧಿಸಿದ ವಿದ್ಯಾರ್ಥಿನಿಯರು ಹಾಗೂ ಪಾಲಕರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಬಾರದು ಎನ್ನುವ ಆದೇಶ ಎಲ್ಲಿದೆ ತೋರಿಸಿ ಎಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಕೆಲ ಕಾಲ ಕಾಲೇಜಿನ ಆವರಣದಲ್ಲಿ ಗೊಂದಲದ ಜೊತೆಗೆ ಬಿಗುವಿನ ವಾತಾವರಣ ನಿರ್ಮಾಣಗೊಂಡಿತ್ತು.
ಸುದ್ದಿ ತಿಳಿದು ಸ್ಥಳಕ್ಕೆ ಧಾವಿಸಿದ ಸಿಪಿಐ ಗೋಪಾಲ್ ನಾಯಕ್ ನೇತೃತ್ವದ ಪೊಲೀಸ್ ಅಧಿಕಾರಿಗಳು, ವಿದ್ಯಾರ್ಥಿನಿಯರು ಹಾಗೂ ಕಾಲೇಜಿನ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ವಾತಾವರಣ ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅನಿರೀಕ್ಷಿತವಾಗಿ ನಡೆದ ಘಟನೆಯಿಂದಾಗಿ ಕಾಲೇಜಿನ ಪದವಿ ತರಗತಿಗಳಿಗೆ ರಜೆ ಘೋಷಿಸಿದ ಕಾಲೇಜಿನ ಆಡಳಿತ ಮಂಡಳಿ, ಮುಂದಿನ 3 ದಿನಗಳ ಕಾಲ ಕಾಲೇಜಿಗೆ ರಜೆ ಘೋಷಿಸಿ, ಆನ್ ಲೈನ್ ತರಗತಿ ನಡೆಸಲು ನಿರ್ಧರಿಸಿದೆ ಎಂದು ಕಾಲೇಜಿನ ಮೂಲಗಳಿಂದ ತಿಳಿದು ಬಂದಿದೆ.
ಇದನ್ನೂ ಓದಿ : ಹಿಜಾಬ್ ಪ್ರಕರಣ: ನಿಯಮಾನುಸಾರ ಸಲ್ಲಿಸದ ಅರ್ಜಿ ವಜಾ ಮಾಡಿದ ಕೋರ್ಟ್.. ವಿಚಾರಣೆ ನಾಳೆಗೆ ಮುಂದೂಡಿಕೆ