ಬಸವಕಲ್ಯಾಣ: ಕೊರೊನಾ ವೈರಸ್ ತಡೆಗಟ್ಟಲು ಜಾರಿಗೊಳಿಸಲಾದ ಲಾಕ್ಡೌನ್ ಅವಧಿಯಲ್ಲಿ ಹಾಲು, ತರಕಾರಿ ಸೇರಿದಂತೆ ಜನರಿಗೆ ಅವಶ್ಯಕ ವಸ್ತುಗಳ ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಜನರಿಗೆ ಯಾವುದೇ ಸಮಸ್ಯೆಯಾಗದಂತೆ ಎಚ್ಚರ ವಹಿಸಿ ಎಂದು ಸಂಸದ ಭಗವಂತ ಖೂಬಾ ಅಧಿಕಾರಿಗಳಿಗೆ ಸೂಚಿಸಿದರು.
ಮಿನಿ ವಿಧಾನ ಸೌಧದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಸಂಸದರು, ಕೊರೊನಾ ಹರಡದಂತೆ ಕೈಗೊಳ್ಳಲಾಗಿರುವ ಕ್ರಮಗಳು ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಕೈಗೊಂಡಿರುವ ಮುಂಜಾಗೃತಾ ಕ್ರಮಗಳ ಕುರಿತು ಮಾಹಿತಿ ಪಡೆದರು.
ಪ್ರತಿ ದಿನ ಬೆಳಗ್ಗೆ 7 ರಿಂದ ರಾತ್ರಿ 9 ರ ವರೆಗೆ ಪಡಿತರ ವಿತರಣೆ ಮಾಡಬೇಕು. ಈ ಬಗ್ಗೆ ಒಂದು ದೂರು ಸಹ ಬರದಂತೆ ನೋಡಿಕೊಳ್ಳಿ. ಕೊರೊನಾ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳು, ಸಮಾಧಾನಕರವಾಗಿವೆ. ಏ.14 ರಂದು ಒಂದು ವೇಳೆ ನಿರ್ಬಂಧ ಸಡಿಲಿಸಿ ಜನ ಇದ್ದಕ್ಕಿದಂತೆ ಹೊರ ಬಂದರೆ ಎದುರಾಗುವ ಪರಿಸ್ಥಿತಿ ನಿರ್ವಹಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ಶಾಸಕ ಬಿ.ನಾರಾಯಣರಾವ್ ಮಾತನಾಡಿ, ಕೆಲ ಖಾಸಗಿ ಆಸ್ಪತ್ರೆಗಳನ್ನು ಹೊರತುಪಡಿಸಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಚಿಕಿತ್ಸೆಗೆ ಬರುವ ರೋಗಿಗಳಿಗೆ ಸ್ಪಂದಿಸುತ್ತಿಲ್ಲ. ಚಿಕಿತ್ಸೆ ನೀಡದ ಇಂಥ ಖಾಸಗಿ ಆಸ್ಪತ್ರೆಗಳ ಲೈಸನ್ಸ್ ರದ್ದು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅಗತ್ಯ ಸಾಮಗ್ರಿಗಳನ್ನು ಪ್ರತಿ ಮನೆಗೆ ಪೂರೈಸಲಾಗುತ್ತಿದೆ ಎಂದು ಸಹಾಯಕ ಆಯುಕ್ತ ಭಂವರ್ಸಿಂಗ್ ಮೀನಾ ವಿವರಿಸಿದರು.