ಬೆಂಗಳೂರು: ಜಿಂದಾಲ್ಗೆ 3,667 ಎಕರೆ ಭೂಮಿ ಮಾರಾಟ ಮಾಡುವ ಸರ್ಕಾರದ ನಿರ್ಧಾರ ಹಾಗೂ ಬರ ನಿರ್ವಹಣೆ ವೈಫಲ್ಯ ಖಂಡಿಸಿ ನಾಳೆಯಿಂದ ಎರಡು ದಿನಗಳ ಕಾಲ ಬಿಜೆಪಿ ಶಾಸಕರು ಮತ್ತು ಸಂಸದರು ಅಹೋರಾತ್ರಿ ಧರಣಿ ನಡೆಸಲಿದ್ದಾರೆ.
ನಗರದ ಆನಂದರಾವ್ ವೃತ್ತದಲ್ಲಿರುವ ಗಾಂಧಿ ಪ್ರತಿಮೆ ಎದುರು ನಾಳೆ ಬೆಳಗ್ಗೆ 10 ಗಂಟೆಗೆ ಧರಣಿ ಆರಂಭಿಸಲಿದ್ದು, ಬಿಜೆಪಿ ಸಂಸದರು ಮತ್ತು ಶಾಸಕರು ಧರಣಿಯಲ್ಲಿ ಭಾಗಿಯಾಗಲಿದ್ದಾರೆ. ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದಲ್ಲಿ ಧರಣಿ ಆರಂಭಗೊಳ್ಳಲಿದ್ದು, ದೆಹಲಿ ಪ್ರವಾಸದಿಂದ ಹಿಂದಿರುಗಿದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಧರಣಿಯಲ್ಲಿ ಭಾಗವಹಿಸಲಿದ್ದಾರೆ.
ಎರಡು ದಿನಗಳ ಅಹೋರಾತ್ರಿ ಧರಣಿ ನಂತರ ಜೂನ್ 16ರಂದು ಬಿಜೆಪಿ ಶಾಸಕರು ಮತ್ತು ಸಂಸದರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲಿದ್ದಾರೆ. ರಾಜ್ಯದ 105 ಬಿಜೆಪಿ ಶಾಸಕರು, 25 ಸಂಸದರು ಧರಣಿಯಲ್ಲಿ ಭಾಗವಹಿಸುತ್ತಿರುವ ಕಾರಣ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಮಳೆಯಿಂದ ರಕ್ಷಣೆ ಪಡೆಯಲು ಅನುವಾಗುವಂತೆ ತಾತ್ಕಾಲಿಕ ಶೆಡ್ ನಿರ್ಮಿಸಲಾಗುತ್ತಿದೆ. ಜೊತೆಗೆ ರಾತ್ರಿ ವಾಸ್ತವ್ಯ ಹೂಡಲು ಅನುವಾಗುವಂತೆ 150ಕ್ಕೂ ಹೆಚ್ಚಿನ ಜನರಿಗೆ ಅಗತ್ಯವಿರುವ ಹಾಸಿಗೆ, ದಿಂಬು ವ್ಯವಸ್ಥೆ ಕಲ್ಪಿಸಲಾಗುತ್ತಿದೆ.