ಬೆಂಗಳೂರು : ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಜಂಟಿ ಪ್ರಚಾರಕ್ಕೆ ಮಾಜಿ ಸಚಿವ ಚೆಲುವರಾಯಸ್ವಾಮಿ ಮತ್ತು ಅವರ ತಂಡ ಗೈರಾಗುವುದು ಬಹುತೇಕ ಖಚಿತ ಎನ್ನಲಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಇಂದು ಚೆಲುವರಾಯಸ್ವಾಮಿ ಸಿದ್ದರಾಮಯ್ಯ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದು, ಚೆಲುವರಾಯಸ್ವಾಮಿ ಅವರ ಮನವೊಲಿಸಲು ಹಲವು ರೀತಿಯ ಪ್ರಯತ್ನ ನಡೆಸಿದರೂ ಒಮ್ಮತ ಮೂಡಲಿಲ್ಲ ಎಂದು ತಿಳಿದು ಬಂದಿದೆ.
ತಮ್ಮದೇ ಕ್ಷೇತ್ರವಾಗಿರುವ ನಾಗಮಂಗಲದಲ್ಲಿ ಇಂದು ನಡೆಯುತ್ತಿರುವ ಜೆಡಿಎಸ್-ಕಾಂಗ್ರೆಸ್ ಜಂಟಿ ಸಮಾವೇಶದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಹೇಳಿರುವ ಚೆಲುವರಾಯಸ್ವಾಮಿ, ನಾಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.
ಜೆಡಿಎಸ್ ನಾಯಕರು ಕಾಂಗ್ರೆಸಿಗರ ಬಗ್ಗೆ ತುಂಬಾ ಹಗುರವಾಗಿ ಮಾತನಾಡುತ್ತಾರೆ. ಮೈತ್ರಿ ಧರ್ಮ ಪಾಲನೆ ಮಾಡುವುದಿಲ್ಲ. ಹೀಗಾಗಿ ನಾನು ಜೆಡಿಎಸ್ ನಾಯಕರ ಜತೆ ನನ್ನ ಕ್ಷೇತ್ರದಲ್ಲಿ ವೇದಿಕೆ ಹಂಚಿಕೊಳ್ಳುವುದಿಲ್ಲ. ನಾನು ವೇದಿಕೆ ಹಂಚಿಕೊಂಡರೆ ತಳಮಟ್ಟದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತದೆ. ಪಕ್ಷ ಸಂಘಟನೆಗೆ ಹಿನ್ನಡೆಯಾಗುತ್ತದೆ ಎಂದು ಸಿದ್ದರಾಮಯ್ಯ ಬಳಿ ವಾದಿಸಿದ್ದಾರೆ. ಇದು ರಾಹುಲ್ ಗಾಂಧಿ ಅವರ ಸೂಚನೆ, ಎಲ್ಲರೂ ಮೈತ್ರಿ ಧರ್ಮ ಪಾಲಿಸಲೇಬೇಕು. ನೀವು ನಿಮ್ಮ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಗೈರು ಹಾಜರಾದರೆ ತಪ್ಪು ಸಂದೇಶ ರವಾನೆಯಾಗುತ್ತದೆ. ಭಿನ್ನಾಭಿಪ್ರಾಯಗಳೇನೇ ಇದ್ದರೂ ಅದನ್ನು ಚುನಾವಣೆ ನಂತರ ಕುಳಿತು ಮಾತನಾಡಿ ಬಗೆಹರಿಸಿಕೊಳ್ಳೋಣ. ಈಗ ಹಠ ಮಾಡದೇ ಸಮಾವೇಶಕ್ಕೆ ಬನ್ನಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಆದರೆ, ಚೆಲುವರಾಯಸ್ವಾಮಿ ನಿರಾಕರಿಸಿದ್ದು, ನಾಳೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕೆ.ಆರ್.ನಗರದಲ್ಲಿ ಪಾಲ್ಗೊಳ್ಳುವ ಕಾರ್ಯಕ್ರಮಕ್ಕೆ ಬೇಕಾದರೆ ಬರುತ್ತೇನೆ. ನಾಗಮಂಗಲ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಹೆಚ್ಎಎಲ್ಗೆ ತೆರಳಿ ಅಲ್ಲಿಂದ ಹೆಲಿಕಾಪ್ಟರ್ ನಲ್ಲಿ ಮಂಡ್ಯ ಜಿಲ್ಲೆಯ ನಾಗಮಂಗಲಕ್ಕೆ ಪ್ರಯಾಣ ಬೆಳೆಸಿದರು. ಈ ವೇಳೆ ಸಿದ್ದರಾಮಯ್ಯ ಅವರು ಚೆಲುವರಾಯಸ್ವಾಮಿ ಅವರನ್ನ ಜೊತೆಯಲ್ಲೇ ಕಾರಿನಲ್ಲಿ ಕರೆದುಕೊಂಡು ಹೋದರು.