ಬೆಂಗಳೂರು: ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸಲ್ಲಿಸಲಾಗಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಏಕಸದಸ್ಯ ಪೀಠ, ಪ್ರಕರಣವನ್ನು ವಿಭಾಗೀಯ ಪೀಠಕ್ಕೆ ವರ್ಗಾಯಿಸಿದೆ.
ಈ ಕುರಿತು ನಗರದ ನಿವೃತ್ತ ತೆರಿಗೆ ಅಧಿಕಾರಿ ಇಕ್ಬಾಲ್ ಅಹ್ಮದ್, ಚಿತ್ರದುರ್ಗ ಮೂಲದ ಹೂಡಿಕೆದಾರ ಸಿರಾಜುದ್ದೀನ್ ಸೇರಿ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲೋಕ್ ಆರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಹೊರಡಿಸಿದೆ.
ಕಳೆದ ವಾರ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಹಲವು ರಿಟ್ ಅರ್ಜಿಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ, ಎಸ್ಐಟಿಗೆ ತನಿಖಾ ಪ್ರಗತಿ ವರದಿ ನೀಡುವಂತೆ ನ್ಯಾಯಾಲಯ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಇಂದು ಎಸ್ಐಟಿ ಅಧಿಕಾರಿಗಳು ತನಿಖೆಯ ಪ್ರಗತಿ ವರದಿಯನ್ನ ನ್ಯಾಯಾಲಯಕ್ಕೆ ನೀಡಿದ ವೇಳೆ, ಆ್ಯಂಬಿಡೆಂಟ್ ಸೇರಿದಂತೆ ಇದೇ ಮಾದರಿಯ ಪ್ರಕರಣ ಸದ್ಯ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ವಿಚಾರಣೆಯಲ್ಲಿದ್ದು, ಭಾಗೀಯ ಪೀಠಕ್ಕೆ ವರ್ಗಾವಣೆ ಸೂಕ್ತ ಎಂದು ಏಕಸದಸ್ಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ.
ಹೀಗಾಗಿ ಎಸ್ಐಟಿ ಅಧಿಕಾರಿಗಳು ತನಿಖೆಯ ವರದಿಯನ್ನ ಲಕೋಟೆಯನ್ನ ವಿಭಾಗೀಯ ಪೀಠಕ್ಕೆ ಸಲ್ಲಿಕೆ ಮಾಡಿದ್ದು, ಜುಲೈ12 ರಂದು ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ವಿಭಾಗೀಯ ಪೀಠ ಐಎಂಎ ಅರ್ಜಿ ವಿಚಾರಣೆ ನಡೆಸಲಿದೆ.
ಮನ್ಸೂರ್ ಖಾನ್, ಸಚಿವರು, ಶಾಸಕರು, ಸ್ಥಳೀಯ ಪೊಲೀಸ್, ಪ್ರಭಾವಿ ರಾಜಕಾರಣಿಗಳಿಗೆ ಆಪ್ತನಾಗಿದ್ದಾನೆ. ಪೊಲೀಸರು ಪಾರದರ್ಶಕ ತನಿಖೆ ನಡೆಸುತ್ತಾರೆಂಬ ನಂಬಿಕೆಯೂ ನಮಗಿಲ್ಲ. ಹೀಗಾಗಿ, ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ರಾಜ್ಯ ಸರಕಾರಕ್ಕೆ ನಿರ್ದೇಶಿಸಬೇಕೆಂದು ಅರ್ಜಿದಾರರು ಅರ್ಜಿಯಲ್ಲಿ ಮನವಿ ಮಾಡಿದ್ದರು.