ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಕೊಳ್ಳಲು ಡಿ.ವಿ.ಸದಾನಂದಗೌಡ ಸೇರಿ ರಾಜ್ಯದ ಒಟ್ಟು ನಾಲ್ವರಿಗೆ ಅಧಿಕೃತ ಆಹ್ವಾನ ಬಂದಿದೆ. ಸಂಜೆ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಇವರೆಲ್ಲಾ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಸತತ ಎರಡನೇ ಬಾರಿಗೆ ಆಯ್ಕೆಯಾಗಿರುವ ಡಿ.ವಿ.ಸದಾನಂದಗೌಡರನ್ನು ಮತ್ತೊಮ್ಮೆ ಸಂಪುಟಕ್ಕೆ ಸೇರ್ಪಡೆಗೊಳಿಸಿಕೊಳ್ಳಲು ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಈ ಬಗ್ಗೆ ದೂರವಾಣಿ ಕರೆ ಮಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ದರಾಗಿ ಎಂದು ಮಾಹಿತಿ ನೀಡಿದ್ದಾರೆ. ಮೋದಿ ಅವರ ಸಂಪುಟದಲ್ಲಿ ಈಗಾಗಲೇ 5 ವರ್ಷ, ಎರಡು-ಮೂರು ಖಾತೆ ನಿರ್ವಹಿಸಿರುವ ಅನುಭವ ಇರುವ ಜೊತೆಗೆ ರಾಜ್ಯ ಹಾಗೂ ಕೇಂದ್ರದ ನಡುವೆ ಈ ಹಿಂದೆ ಅನಂತ್ ಕುಮಾರ್ ಕೊಂಡಿಯಾಗಿ ಕೆಲಸ ಮಾಡುತ್ತಿದ್ದರು. ಈಗ ಅವರ ಜಾಗವನ್ನು ಸದಾನಂದಗೌಡ ತುಂಬಲಿದ್ದಾರೆ ಎನ್ನುವ ಕಾರಣಕ್ಕೆ ಅವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ.
ಸಚಿವರಾಗಿ ಪ್ರಮಾಣ ವಚನ ಸ್ವೀಕಾರಕ್ಕೆ ಆಹ್ವಾನ ಬಂದಿರುವ ಮಾಹಿತಿಯನ್ನು ಸ್ವತಃ ಡಿ.ವಿ.ಸದಾನಂದಗೌಡರೇ ಖಚಿತಪಡಿಸಿದ್ದಾರೆ. ದೂರವಾಣಿ ಮೂಲಕ ಮಾತನಾಡಿದ ಅವರು, ಅಮಿತ್ ಶಾ ಅವರಿಂದ ಕರೆ ಬಂತು, 5 ಗಂಟೆಗೆ ಮೋದಿ ಅವರ ಮನೆಗ ಬನ್ನಿ, ಸಂಜೆ 7 ಗಂಟೆಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿ ಎನ್ನುವ ಸಂದೇಶ ಬಂದಿದೆ. ನರೇಂದ್ರ ಮೋದಿ ಮತ್ತು ಅಮಿತ್ ಶಾರ ನಿರ್ಧಾರ ನನ್ನ ಮನಸ್ಸಿಗೆ ನೆಮ್ಮದಿ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಸಚಿವ ಸ್ಥಾನ ಗಿಟ್ಟಿಸಿಕೊಂಡ ಸುರೇಶ್ ಅಂಗಡಿ, ಪ್ರಹ್ಲಾದ್ ಜೋಶಿ:
ಬೆಳಗಾವಿ ಸಂಸದ ಸುರೇಶ್ ಅಂಗಡಿಗೆ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೂರವಾಣಿ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಸತತ 4ನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಸುರೇಶ್ ಅಂಗಡಿಯವರಿಗೆ ಈ ಹಿಂದೆಯೇ ಸಚಿವ ಸ್ಥಾನ ಸಿಗಲಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು, ಆದರೆ ಆಗಲಿಲ್ಲ. ಈಗ ಸಚಿವ ಸ್ಥಾನ ಕನ್ಫರ್ಮ್ ಆಗಿದೆ.
ಧಾರವಾಡ ಸಂಸದರಾಗಿ ನಾಲ್ಕನೇ ಬಾರಿ ಆಯ್ಕೆಯಾಗಿರುವ ಪ್ರಹ್ಲಾದ್ ಜೋಶಿಗೂ ಕೂಡ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುವಂತೆ ಅಮಿತ್ ಶಾ ಆಹ್ವಾನ ನೀಡಿದ್ದಾರೆ. ಈ ಹಿಂದೆ ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಕೆಲಸ ಮಾಡಿದ್ದ ಪ್ರಹ್ಲಾದ್ ಜೋಶಿ ಅವರನ್ನು ಈ ಬಾರಿ ಕೇಂದ್ರ ಸಚಿವರನ್ನಾಗಿ ಮಾಡಲು ಮೋದಿ ನಿರ್ಧರಿಸಿದ್ದಾರೆ.
![MINISTER POST](https://etvbharatimages.akamaized.net/etvbharat/prod-images/3422627_dvghgdhh.jpg)
ಮೂವರು ಸಂಸದರು ಹಾಗೂ ಓರ್ವ ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಸೇರಿ ಒಟ್ಟು ರಾಜ್ಯದ ನಾಲ್ವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದ್ದು, ಇಂದು ಸಂಜೆ ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿಯೇ ಈ ನಾಲ್ವರೂ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.