ಬಾಗೇಪಲ್ಲಿ: ಡಾ. ಬಿ. ಆರ್. ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಮೀಸಲಿಟ್ಟಿರುವ ಸರ್ಕಾರಿ ನಿವೇಶನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡುವ ಯೊಜನೆಗೆ ವಿರೋಧ ವ್ಯಕ್ತಪಡಿಸಿದ್ದ ದಲಿತ ಸಂಘರ್ಷ ಸಮಿತಿ ಹಿರಿಯ ನಾಯಕರ ಜೊತೆ ಸಹಾಯಕ ಆಯುಕ್ತರು ಸಂವಾದ ನಡೆಸಿ ದಾಖಲೆಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಮುಖಂಡ ಎ. ವಿ. ಪೂಜಪ್ಪ ಮಾತನಾಡಿ, ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಅಗತ್ಯವಿರುವ ನಿವೇಶನ ಕಾಯ್ದಿರಿಸಿ, ಸರ್ವ ಸದಸ್ಯರು ಒಪ್ಪಿಗೆ ಮೇರೆಗೆ ಜಮೀನು ಮಂಜೂರಾತಿಗೆ ಕಂದಾಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಶಾಸಕರು ಅಧಿಕಾರ ದುರ್ಬಳಕೆ ಮಾಡಿಕೊಂಡು ಇಂದಿರಾ ಕ್ಯಾಂಟೀನ್ ನಿರ್ಮಿಸಲು ನಿವೇಶನ ಸಮತಟ್ಟು ಕಾಮಗಾರಿ ಪ್ರಾರಂಭಿಸಿರುವುದು ಸರಿಯಲ್ಲ ಎಂದು ಎಸಿ ಮುಂದೆ ಅಸಮಾಧಾನ ವ್ಯಕ್ತಪಡಿಸಿದರು.
ಭವನ ನಿರ್ಮಾಣಕ್ಕಾಗಿ ಕಾಯ್ದಿರಿಸಿರುವ ನಿವೇಶನದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಲು ಮುಂದಾದರೆ ದಲಿತ ಸಂಘರ್ಷ ಸಮಿತಿ ವತಿಯಿಂದ ಅರೆಬೆತ್ತಲೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.