ಚಿಕ್ಕಮಗಳೂರು: ನಾಳೆ ವಿಧಾನಸಭಾ ಚುನಾವಣೆ ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಚಿಕ್ಕಮಗಳೂರು ನಗರದ ಐಡಿಎಸ್ಜಿ ಕಾಲೇಜಿನಲ್ಲಿ ಸಕಲ ಸಿದ್ಧತೆ ಭರದಿಂದ ಸಾಗಿದೆ. ಚುನಾವಣೆ ಅಧಿಕಾರಿಗಳಿಂದ ಪರಿಶೀಲನೆ ಕಾರ್ಯ ಮುಗಿದಿದೆ, ಅಧಿಕಾರಿಗಳು ಮಸ್ಟರಿಂಗ್ ಕೇಂದ್ರಗಳಿಂದ ಮತಯಂತ್ರಗಳನ್ನು ಸಿಬ್ಬಂದಿಗೆ ಹಸ್ತಾಂತರಿಸಲಾಗಿದ್ದು, ಅವರನ್ನು ಆಯಾ ಮತಗಟ್ಟೆ ಕೇಂದ್ರಗಳಿಗೆ ಕೆಎಸ್ಆರ್ಟಿಸಿ ಬಸ್ ಮೂಲಕ ಕಳುಹಿಸಿಕೊಡಲಾಗಿದೆ.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಕೆ.ಎನ್. ರಮೇಶ್ ಮಾತನಾಡಿ, ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದಲ್ಲಿ, ಒಟ್ಟು 9,34,769 ಮತದಾರರು ಇದ್ದು, ಇದರಲ್ಲಿ 4,64,228 ಪುರುಷರು ಮತ್ತು 4,70,505 ಮಹಿಳಾ ಮತದಾರರಿದ್ದಾರೆ. ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 61 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ. ಪ್ರತಿಯೊಬ್ಬ ಮತದಾರನು ತನ್ನ ಹಕ್ಕನ್ನು ನಾಳೆ ಮತಗಟ್ಟೆಯಲ್ಲಿ ಚಲಾಯಿಸುವುದರ ಮೂಲಕ ಅಭ್ಯರ್ಥಿಗಳ ಹಣೆ ಬರಹವನ್ನು ನಾಳೆ ನಿರ್ಧಾರ ಮಾಡಲಿದ್ದಾನೆ ಎಂದರು.
ಜಿಲ್ಲೆಯ ಎಲ್ಲ ಮತಗಟ್ಟೆಯಲ್ಲಿ 5.786 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದು, 1,700 ಪೊಲೀಸ್ ಸಿಬ್ಬಂದಿಗಳು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಸಿಬ್ಬಂದಿಗಳಿಗೆ ಮತಯಂತ್ರಗಳನ್ನು ಹಸ್ತಾಂತರಿಸಿ, ಸೂಚನೆಗಳನ್ನು ನೀಡಲಾಗಿದ್ದು, ಪ್ರತಿಯೊಂದು ಮತಗಟ್ಟೆಯಲ್ಲಿ ಮೂಲಭೂತ ಸೌಕರ್ಯದ ವ್ಯವಸ್ಥೆ ಮಾಡಲಾಗಿದೆ. ನಮ್ಮ ಜಿಲ್ಲೆಯಲ್ಲಿ ಶಾಂತಿಯುತ ಹಾಗೂ ನ್ಯಾಯಯುತ ಮತದಾನ ನಡೆಯಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಪ್ರತಿಯೊಬ್ಬ ಮತದಾರರು ಮತಗಟ್ಟೆಗೆ ಬಂದು ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ಜಿಲ್ಲೆಯ ಪ್ರತಿಯೊಂದು ಮತಗಟ್ಟೆಯಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪ್ರಮುಖವಾಗಿ ನಕ್ಸಲ್ ಬಾದಿತ ಪ್ರದೇಶಗಳಲ್ಲಿ ಸಿಆರ್ಪಿಎಫ್ ಹಾಗೂ ಎಎನ್ಎಫ್ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 10 ಮಂದಿಯನ್ನು ಗಡಿಪಾರು ಮಾಡಲಾಗಿದೆ. ಜಿಲ್ಲೆ ಪ್ರವೇಶಿಸುವ ಕಡೆಯಿರುವ ಪ್ರತಿಯೊಂದು ಚೆಕ್ ಪೋಸ್ಟ್ನಲ್ಲಿ ವಾಹನ ತಪಾಸಣೆ ಮಾಡಲಾಗುತ್ತಿದೆ. ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಶಾಂತಿಯುತ ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಇದನ್ನೂ ಓದಿ:ಮತದಾನದ ಪ್ರಮಾಣ ಹೆಚ್ಚಿಸಲು ತಂತ್ರಜ್ಞಾನದ ಮೊರೆ ಹೋದ ಚುನಾವಣಾ ಆಯೋಗ; ಆ್ಯಪ್ ಮೂಲಕ ಮತಗಟ್ಟೆ ಕ್ಯೂ ಸ್ಥಿತಿಗತಿ ಮಾಹಿತಿ