ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಕಮಕ್ಕಿಯಲ್ಲಿ ಜಮೀನಿಗೆ ಹೋಗುವ ಸಮಯದಲ್ಲಿ ವಿದ್ಯುತ್ ತಂತಿ ತುಳಿದು ಯುವಕಯೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.
ಮಂಜುನಾಥ್ (25) ಮೃತ ದುರ್ದೈವಿ. ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿ ನೆಲಕ್ಕೆ ಬಿದ್ದಿದ್ದವು. ತಂತಿ ಬಿದ್ದು ಹಲವು ದಿನಗಳಾದರೂ ಅಧಿಕಾರಿಗಳು ತೆರವು ಮಾಡಿರಲಿಲ್ಲ.
ತಂತಿ ಬಿದ್ದಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿತ್ತು. ಆದರೆ, ಯಾರೋ ಮತ್ತೆ ವಿದ್ಯುತ್ ಆನ್ ಮಾಡಿದ್ದಾರೆ. ಹೀಗಾಗಿ ಈ ದುರ್ಘಟನೆ ನಡೆದಿದೆ. ಹಲವು ದಿನಗಳು ಕಳೆದರೂ ಅದನ್ನು ತೆರವುಗೊಳಿಸದ ಮೆಸ್ಕಾಂ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.