ಚಿಕ್ಕಮಗಳೂರು: ಕಳೆದ ಮೂರು ನಾಲ್ಕು ದಿನಗಳ ಹಿಂದೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಸಗಲಿ ಹಾಗೂ ತೋಟದಮಕ್ಕಿ ಸುತ್ತಮುತ್ತಲ ಗ್ರಾಮಗಳಲ್ಲಿ ರೈತರ ಕಾಫಿ ಬೆಳೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ನಾಶಪಡಿಸಿದ್ದರು. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮದ ನೂರಕ್ಕೂ ಹೆಚ್ಚು ಜನರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಅರಣ್ಯ ಇಲಾಖೆಯವರು ಆತುರದ ತೀರ್ಮಾನ ಕೈಗೊಂಡು ಕಾಫಿ ಬೆಳೆ ನಾಶಪಡಿಸಿದ್ದಾರೆ. ಇನ್ನು ನಾಲ್ಕು ತಿಂಗಳ ಕಾಲಾವಕಾಶ ನೀಡಿದ್ದರೆ, ಕಾಫಿ ಬೆಳೆ ರೈತರ ಕೈ ಸೇರುತ್ತಿತ್ತು. ಆದರೆ. ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮೇಲೆ ದೌರ್ಜನ್ಯವೆಸಗಿದ್ದಾರೆ. ಹೀಗಾಗಿ ಕ್ರಮ ಕೈಗೊಂಡು, ರೈತರಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಿದರು.
ರಾಜ್ಯ ಸರ್ಕಾರದ ಆದೇಶದಂತೆ ಇಲ್ಲಿನ 211 ಕುಟುಂಬಗಳಿಗೂ ಪುನರ್ವಸತಿ ಕಲ್ಪಿಸಿ, ಅವರಿಗೆ ಭೂಮಿ ವ್ಯವಸ್ಥೆ ಮಾಡಬೇಕು. ಅಲ್ಲಿಯವರೆಗೂ ಜಾಗದಲ್ಲಿರುವವರನ್ನು ತೆರವುಗೊಳಿಸಬಾರದು. ಈ ಎಲ್ಲ ರೈತರಿಗೂ ಮಾಡ್ಲಾ-ಇಪ್ಲಾ ಮಾದರಿಯಲ್ಲಿ ಪುನರ್ವಸತಿ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಗ್ರಾಮಸ್ಥರ ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಈ ಬಗ್ಗೆ ಹಲವಾರು ಬಾರಿ ಚರ್ಚೆ ಮಾಡಲಾಗಿದೆ. ನಿಮಗೆ ತೊಂದರೆಯಾಗದಂತೆ ಸರ್ಕಾರದ ಜೊತೆ ಚರ್ಚಿಸಿ ಅನುಕೂಲ ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.