ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆ ಗುಂಡಿಯಲ್ಲಿ ಸಿದ್ದಾರ್ಥ ಹೆಗ್ಡೆ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ. ಸಿ. ಎನ್. ಅಶ್ವಥ್ ನಾರಯಣ್ ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾತನಾಡಿದ ಡಿಸಿಎಂ, ವಿದ್ಯಾರ್ಥಿಗಳ ಶೈಕ್ಷಣಿಕ ಹಂತದ ಪ್ರಮುಖ ಘಟ್ಟವಾಗಿರುವ ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆ ಎದುರಿಸಲು ಅವರಿಗೆ ಅನುಕೂಲ ಮಾಡಿಕೊಡಬೇಕು. ಹೀಗಾಗಿ ಶಾಲಾ- ಕಾಲೇಜುಗಳನ್ನು ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಯಾವುದೇ ಲೋಪದೋಷವಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ. ಹೀಗಾಗಿ ಪೋಷಕರು ನಿರ್ಭಯವಾಗಿ ಮಕ್ಕಳನ್ನು ಶಾಲಾ-ಕಾಲೇಜಿಗೆ ಕಳುಹಿಸಬಹುದಾಗಿದೆ ಎಂದು ಹೇಳಿದರು.
ಸಿದ್ದರಾಮಯ್ಯ ಅವರನ್ನು ನಂಬಿರುವ ಕಾಂಗ್ರೆಸ್ ಎಲ್ಲಾ ರಂಗದಲ್ಲೂ ವಿಫಲತೆ ಕಾಣುತ್ತಿದೆ. ಕಾಂಗ್ರೆಸ್ಗೆ ಹಿನ್ನಡೆಯಾಗುತ್ತಲೇ ಇದೆ. ಆದರೆ, ಈ ಸತ್ಯವನ್ನು ಒಪ್ಪಿಕೊಳ್ಳಲು ಅವರಿಗೆ ಆಗುತ್ತಿಲ್ಲ. ಗ್ರಾಪಂ ಚುನಾವಣೆಯಲ್ಲಿ ಶೇ.60 ರಷ್ಟು ಬಿಜೆಪಿ ಜಯ ಸಾಧಿಸಿದೆ. ಕಾಂಗ್ರೆಸ್ ಪಕ್ಷದಲ್ಲಿ ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದಲ್ಲೂ ಒಳ ಜಗಳವಿದೆ. ಅವರಲ್ಲಿ ಸ್ವಷ್ಟತೆ ಇಲ್ಲ. ಕೇವಲ ಅವಕಾಶವಾದಿ ರಾಜಕೀಯ ಮಾಡಿಕೊಂಡು ಬರುತ್ತಿದೆ. ಮುಂದಿನ ಚುನಾವಣೆಗಳಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಹೇಳಿದರು.