ಚಿಕ್ಕಮಗಳೂರು : ಇದೇ ತಿಂಗಳ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಲಿದೆ. ಇದಕ್ಕೆ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ಆದರೆ ಇದಕ್ಕೆ ಸಂಬಂಧಿಸಿದಂತೆ ರಾಜಕೀಯ ಆರೋಪ ಪ್ರತ್ಯಾರೋಪಗಳು ನಡೆಯುತ್ತಿವೆ. ಇದರ ನಡುವೆಯೇ ಶೃಂಗೇರಿ ಶ್ರೀಗಳ ಭಾವಚಿತ್ರ ಹಾಗೂ ಹೆಸರು ಬಳಸಿ ಅಯೋಧ್ಯೆಯ ಪ್ರಾಣಪ್ರತಿಷ್ಠಾಪನೆ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂದು ಅಪಪ್ರಚಾರ ನಡೆಸಲಾಗುತ್ತಿದೆ. ಈ ಬಗ್ಗೆ ಮಠದ ಆಡಳಿತ ಮಂಡಳಿಯಿಂದ ಸ್ಪಷ್ಟನೆ ನೀಡಿದ್ದು, ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದಂತೆ ಕರೆನೀಡಿದ್ದಾರೆ.
ಈಗಾಗಲೇ ಶೃಂಗೇರಿ ಕಿರಿಯ ಶ್ರೀಗಳಿಗೆ ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆಯ ಆಹ್ವಾನ ಪತ್ರಿಕೆ ತಲುಪಿದ್ದು, ಮಠದ ಆಡಳಿತಾಧಿಕಾರಿಯಿಂದ 3 ದಿನದ ಹಿಂದೆಯೇ ಸ್ಪಷ್ಟನೆ ನೀಡಲಾಗಿತ್ತು.
ಅಯೋಧ್ಯೆ ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ವಿರೋಧಿಸುವಂತೆ ಶ್ರೀಗಳು ಕರೆ ನೀಡಿದ್ದಾರೆಂದು ಶೃಂಗೇರಿ ಶ್ರೀ ಭಾರತಿ ತೀರ್ಥ ಸ್ವಾಮೀಜಿಗಳ ಹೆಸರಲ್ಲಿ WWW.jainikajagaran.com ಎಂಬ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಪ್ರಚಾರ ಮಾಡಲಾಗಿದೆ. ಇದನ್ನೇ ನಿಜವೆಂದು ತಿಳಿದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಇದು ಶ್ರೀಗಳ ಗಮನಕ್ಕೆ ಬಂದಿದೆ. ಇದರಿಂದ ಎಚ್ಚೆತ್ತ ಶೃಂಗೇರಿ ಪೀಠದ ಆಡಳಿತ ಮಂಡಳಿ ಅಧಿಕಾರಿ ಗೌರಿ ಶಂಕರ್ ಬಹಿರಂಗ ಪತ್ರವೊಂದನ್ನು ಬಿಡುಗಡೆ ಮಾಡಿದ್ದು, ಯಾವುದೇ ಅಪಪ್ರಚಾರಗಳಿಗೆ ಕಿವಿ ಕೊಡದಂತೆ ಶ್ರೀಗಳು ಕರೆ ನೀಡಿದ್ದಾರೆ.
ಪ್ರತಿಯೊಬ್ಬರು ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಶ್ರೀರಾಮ ತಾರಕ ಜಪ ಮಂತ್ರಿಸುವಂತೆ ಶೃಂಗೇರಿ ಶ್ರೀಗಳು ಕರೆ ನೀಡಿದ್ದಾರೆ. ಆದರೆ, ಕೆಲವರು ಪ್ರಾಣ ಪ್ರತಿಷ್ಠಾಪನೆ ಮಹೋತ್ಸವ ವಿರೋಧಿಸುತ್ತಾರೆಂದು ಅಪಪ್ರಚಾರ ನಡೆಸಿದ್ದಾರೆ. ಯಾವುದೇ ಅಪಪ್ರಚಾರಗಳಿಗೆ ಕಿವಿ ಕೊಡದಂತೆ ಶ್ರೀಗಳು ಕರೆ ನೀಡಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಪೀಠದಿಂದ ಈ ಬಗ್ಗೆ ಅಧಿಕೃತ ಸ್ಪಷ್ಟನೆ ಹಾಗೂ ಪ್ರಕಟಣೆ ಹೊರಡಿಸಿದ್ದಾರೆ.
ಶೃಂಗೇರಿ ಮಠದ ಸ್ಪಷ್ಟೀಕರಣ ಹೀಗಿದೆ: ಸುಮಾರು 500 ವರ್ಷಗಳ ಸುದೀರ್ಘವಾದ ಹೋರಾಟದ ನಂತರ ಶ್ರೀರಾಮಚಂದ್ರನ ಅವತಾರ ಕ್ಷೇತ್ರವಾದ ಪವಿತ್ರ ಅಯೋಧ್ಯೆಯಲ್ಲಿ ಶ್ರೀರಾಮಚಂದ್ರನಿಗೆ ಭವ್ಯವಾದ ದೇವಸ್ಥಾನದ ನಿರ್ಮಾಣವು ನೆರವೇರಿದ್ದು, ಇದೇ ಶೋಭಕೃತ್ ಪುಷ್ಯ ಶುಕ್ಲದ್ವಾದಶಿ (22-1-2024) ಸೋಮವಾರದಂದು ಪ್ರಾಣಪ್ರತಿಷ್ಠಾಮಹೋತ್ಸವವು ಅತ್ಯಂತ ವೈಭವೋಪೇತವಾಗಿ ಸಂಪನ್ನಗೊಳ್ಳಲಿದೆ. ವಿಷಯವು ಸಮಸ್ತ ಆಸ್ತಿಕಸ್ತೋಮಕ್ಕೂ ಅತ್ಯಂತಾನಂದದಾಯಕವಾಗಿದೆ.
ಆದರೆ, ಇಂತಹ ಸಂದರ್ಭದಲ್ಲಿ ಕೆಲವರು ಧರ್ಮದ್ವೇಷಿಗಳು ಸಾಮಾಜಿಕ ಜಾಲತಾಣದಲ್ಲಿ www.dainikjagran.com ಎಂಬ ಹೆಸರನ್ನು ಉಪಯೋಗಿಸಿಕೊಂಡು ಶೃಂಗೇರಿ ಶಾರದಾಪೀಠದ ಪ್ರಸ್ತುತ ಅಧಿಪತಿಗಳಾದ ಪರಮಪೂಜ್ಯ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಛಾಯಾಚಿತ್ರದ ಜೊತೆಗೆ ಶ್ರೀಗಳು ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ವಿರೋಧಿಸುತ್ತಿದ್ದಾರೆ ಎಂಬ ಅರ್ಥ ಬರುವ ಹಾಗೆ ಸಂದೇಶವನ್ನು ಹಾಕಿ ಪ್ರಚಾರ ಮಾಡುತ್ತಿದ್ದಾರೆ. ಆದರೆ, ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಇಂತಹ ಯಾವುದೇ ಸಂದೇಶ ನೀಡಿಲ್ಲ.
ಇದು ಕೇವಲ ಧರ್ಮದ್ವೇಷಿಗಳಾದ ಕೆಲವರು ಮಾಡುತ್ತಿರುವ ಮಿಥ್ಯಾಪ್ರಚಾರವೇ ಸರಿ. ಆದ್ದರಿಂದ ಆಸ್ತಿಕ ಮಹಾಜನರು ಯಾವುದೇ ಕಾರಣಕ್ಕೆ ಇಂತಹ ಅಪಪ್ರಚಾರಗಳಿಗೆ ಬೆಲೆಯನ್ನು ಕೊಡಬಾರದು. ಹಾಗೆಯೇ ದಕ್ಷಿಣಾಮ್ನಾಯ ಶೃಂಗೇರಿ ಶಾರದಾಪೀಠದ ಅಧಿಕೃತವಾದ www.sringeri.net ಎಂಬ ವೆಬ್ಸೈಟಿನಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾದ ವಿಷಯಗಳನ್ನು ಮಾತ್ರವೇ ಪ್ರಾಮಾಣಿಕವಾಗಿ ಪರಿಗಣಿಸಬೇಕು ಎಂದು ಈ ಮೂಲಕ ನಿವೇದಿಸುತ್ತಿದ್ದೇವೆ.
sharadapeetham ಯೂಟ್ಯೂಬ್ ಚ್ಯಾನೆಲ್ ಮೂಲಕ ಕಳೆದ ದೀಪಾವಳಿಯ (12-11-2023) ಸಂದರ್ಭದಲ್ಲಿ ಈ ಪವಿತ್ರ ಪ್ರಾಣಪ್ರತಿಷ್ಠಾ ಮಹೋತ್ಸವವನ್ನು ಮನಸ್ಸಿನಲ್ಲಿಟ್ಟುಕೊಂಡು ಶ್ರೀರಾಮತಾರಕ ಮಹಾಮಂತ್ರವನ್ನು ಜಪಿಸುವಂತೆ ಎಲ್ಲಾ ಆಸ್ತಿಕರಿಗೂ ಶೃಂಗೇರಿ ಜಗದ್ಗುರುಗಳು ಸಂದೇಶವನ್ನು ನೀಡಿದ್ದರು. ಅದನ್ನನುಸರಿಸಿ ಆಸ್ತಿಕರು ಅತ್ಯಧಿಕ ಸಂಖ್ಯೆಯಲ್ಲಿ ಮಂತ್ರಜಪವನ್ನು ಮಾಡುತ್ತಿರುವುದು ಈ ಸಂದರ್ಭದಲ್ಲಿ ಗಮನಾರ್ಹವಾಗಿದೆ. ಹಾಗೆಯೇ ಅತ್ಯಂತ ಪವಿತ್ರವೂ ಅಪರೂಪವು ಆದ ಈ ಪ್ರಾಣಪ್ರತಿಷ್ಠಾಮಹೋತ್ಸವದ ಸುಸಂದರ್ಭದಲ್ಲಿ ಎಲ್ಲಾ ಆಸ್ತಿಕರು ಯಥಾಯೋಗ್ಯವಾಗಿ ಭಾಗವಹಿಸಿ ಶ್ರೀರಾಮನ ಪರಿಪೂರ್ಣಕೃಪೆಗೆ ಪಾತ್ರರಾಗಿ ಕೃತಾರ್ಥರಾಗಬೇಕೆಂದು ಸ್ವಾಮೀಜಿಯವರು ಆಶೀರ್ವದಿಸಿದ್ದಾರೆ.
ಇದನ್ನೂ ಓದಿ: ಶೃಂಗೇರಿ ಶಾರದ ಪೀಠದಿಂದ ಕಾಶ್ಮೀರ ಪುರವಾಸಿನಿ ಶಾರದೆಯ ನೂತನ ವಿಗ್ರಹ ಹಸ್ತಾಂತರ