ಚಿತ್ರದುರ್ಗ : ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಜೆಸಿಬಿ ತಡೆದು ರೈತ ಮುಖಂಡರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಘಟನೆ ಹೊಸದುರ್ಗ ತಾಲೂಕಿನ ಕೆಲ್ಲೋಡು ಗ್ರಾಮದಲ್ಲಿ ನಡೆದಿದೆ.
ಕಳೆದ ಹಲವು ತಿಂಗಳಿನಿಂದ ನೈಸರ್ಗಿಕ ಸಂಪತ್ತು ಅಕ್ರಮವಾಗಿ ಲೂಟಿ ಮಾಡಲಾಗುತ್ತಿದೆ ಎಂದು ರೈತ ಮುಖಂಡರು ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೇದಾವತಿ ನದಿಯ ನೀರಿನಲ್ಲಿ ಅಕ್ರಮವಾಗಿ ಜೆಸಿಬಿ ಮೂಲಕ ಮರಳು ತೆಗೆಯಲಾಗುತ್ತಿದ್ದು,ಇದರಿಂದ ಕೆಲ್ಲೋಡು ಗ್ರಾಮದ ಸುತ್ತಮುತ್ತಲಿನ ಭಾಗದಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.
ಈ ಕುರಿತು ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಅಕ್ರಮ ಮರಳುಗಾರಿಕೆ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿದ್ದು, ಅಧಿಕಾರಿಗಳು ಕಡಿವಾಣ ಹಾಕುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ. ಜತೆಗೆ ಈ ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ಜರುಗಿಸಬೇಕೆಂದು ಅಗ್ರಹಿಸಿದ್ದಾರೆ.