ಚಿತ್ರದುರ್ಗ: ರಾಜ್ಯ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಈ ಬಾರಿ ನಮ್ಮ ಹಿರಿತನಕ್ಕೆ ಗೌರವ ಸಿಗುವ ಭಾವನೆಯಿದೆ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದ್ದಾರೆ.
ಹಲವು ಬಾರಿ ಸಿಎಂ ಸಚಿವ ಸಂಪುಟ ವಿಸ್ತರಣೆಗಾಗಿ ದೆಹಲಿಗೆ ಹೋಗಿ ಬಂದಿದ್ದಾರೆ. ಜಿಲ್ಲೆಯವರಿಗೆ ಸಂಪುಟದಲ್ಲಿ ಸ್ಥಾನ ಸಿಗುವ ನೀರಿಕ್ಷೆಯಿದೆ. ವರಿಷ್ಠರ ಹಾಗೂ ಸಿಎಂ ಬಳಿ ಹೋಗಿ ನಾನು ಸಚಿವ ಸ್ಥಾನಕ್ಕಾಗಿ ಪ್ರಯತ್ನಿಸಿಲ್ಲ ಎಂದರು. ಎಲ್ಲ ಬೆಳವಣಿಗೆಳ ಕುರಿತು ವರಿಷ್ಠರು ಮಾಹಿತಿ ಪಡೆದುಕೊಂಡಿದ್ದಾರೆ. ಈ ಬಾರಿ ಸಚಿವ ಸ್ಥಾನ ನೀಡುವ ವಿಶ್ವಾಸವಿದೆ. ಕಳೆದ ಮೂರು ವರ್ಷದಿಂದ ಕೋಟೆನಾಡಿನ ಜಿಲ್ಲೆಗೆ ಸಚಿವ ಸ್ಥಾನ ಸಿಕ್ಕಿಲ್ಲ. ಈ ಬಾರಿ ಆದ್ರೂ ಸಚಿವ ಸ್ಥಾನ ಸಿಕ್ಕರೆ ಜಿಲ್ಲೆ ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.
ಇನ್ನು ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ನಾಯಕರು ಹಸಿರು ನಿಶಾನೆ ತೋರಿರುವುದು ಮೇಲ್ನೋಟಕ್ಕೆ ಕಂಡು ಬರುತ್ತದೆ. ಸಿಎಂ ಬದಲಾವಣೆ ವಿಚಾರ ನನಗೆ ಮಾಹಿತಿಯಿಲ್ಲ. ಜಿಲ್ಲೆಯ ಉಸ್ತುವಾರಿ ಸಿಗಬೇಕು, ಹೊರ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಕಾಳಜಿಯಿಲ್ಲ, ಹೀಗಾಗಿ ಅಭಿವೃದ್ಧಿ ಕಾರ್ಯಗಳು ಆಗುವುದಿಲ್ಲ ಎಂದು ಹೇಳಿದರು. ಜಿಲ್ಲೆಯ ನಾಯಕರಿಗೆ ಸಚಿವ ಸ್ಥಾನ ಸಿಗಬೇಕು ಎನ್ನುವುದು ಜಿಲ್ಲೆಯ ಜನರ ಬೇಡಿಕೆಯಾಗಿದೆ. ಭಾರತೀಯ ಜನತಾ ಪಾರ್ಟಿ ನಾಯಕರು ಅನುಕೂಲ ಮಾಡಿಕೊಡ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು.