ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2.15 ಕ್ಕೆ ತಲುಪಲಿದ್ದು, ವಿಮಾನದಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ 2.20ರ ವೇಳೆಗೆ ಹೆಲಿಕಾಪ್ಟರ್ ಮೂಲಕ ಪುತ್ತೂರಿನ ಈಶ್ವರಮಂಗಲದ ಕಡೆಗೆ ಪ್ರಯಾಣಿಸಲಿದ್ದಾರೆ.
ಶಾ ಭಾಗಿಯಾಗಲಿರುವ ಕಾರ್ಯಕ್ರಮಗಳು: ಅಮಿತ್ ಶಾ ಅವರು ಮಧ್ಯಾಹ್ನ 2.45 ಕ್ಕೆ ಹೆಲಿಕಾಪ್ಟರ್ ಮೂಲಕ ಈಶ್ವರಮಂಗಲದಲ್ಲಿರುವ ಹೆಲಿಪ್ಯಾಡ್ನಲ್ಲಿ ಬಂದಿಳಿಯಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗದ ಮೂಲಕ ಈಶ್ವರಮಂಗಲದಲ್ಲಿರುವ ಹನುಮಗಿರಿ ದೇವಸ್ಥಾನಕ್ಕೆ ತೆರಳಲಿದ್ದಾರೆ. ಅಲ್ಲಿ ಈಗಾಗಲೇ ಸಿದ್ಧಗೊಂಡಿರುವ ಭಾರತ ಮಾತಾ ಮಂದಿರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲಿಂದ ಮಧ್ಯಾಹ್ನ 3.20ಕ್ಕೆ ಹೆಲಿಕಾಪ್ಟರ್ ಮೂಲಕ ಪುತ್ತೂರಿಗೆ ಆಗಮಿಸಲಿದ್ದಾರೆ. ಬಳಿಕ ರಸ್ತೆ ಮಾರ್ಗದ ಮೂಲಕ ಪುತ್ತೂರಿನ ತೆಂಕಿಲದಲ್ಲಿರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆವರಣ ತಲುಪಿ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಇದನ್ನೂ ಓದಿ: ನಾಳೆ ಮಂಗಳೂರಿಗೆ ಅಮಿತ್ ಶಾ; ಕೇಂದ್ರ ಗೃಹ ಸಚಿವರ ರೋಡ್ ಶೋ ರದ್ದು, ಕೋರ್ ಕಮಿಟಿ ಸಭೆ ಮಾತ್ರ
ಬಿಜೆಪಿ ಕೋರ್ ಕಮಿಟಿ ಸಭೆ: ಅಲ್ಲಿಂದ ಪುತ್ತೂರು ಹೆಲಿಪ್ಯಾಡ್ಗೆ ಬಂದು ಹೆಲಿಕಾಪ್ಟರ್ ಮೂಲಕ ಸಂಜೆ 5.05ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಲಿದ್ದಾರೆ. ಬಳಿಕ ಕೆಂಜಾರುವಿನಲ್ಲಿ ಕಾರ್ಯಕರ್ತರಿಗೆ ಶುಭಕೋರಿ 5.20ಕ್ಕೆ ಕೆಂಜಾರುವಿನಲ್ಲಿರುವ ಶ್ರೀ ದೇವಿ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಶಿಕ್ಷಣ ಸಂಸ್ಥೆಯ ಸೆಮಿನಾರ್ ಸಭಾಂಗಣದಲ್ಲಿ ಆರು ಜಿಲ್ಲೆಗಳ ಬಿಜೆಪಿ ಮುಖಂಡರ ಕೋರ್ ಕಮಿಟಿ ಸಭೆ ನಡೆಸಲಿದ್ದಾರೆ. ಆ ಬಳಿಕ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿದ್ದಾರೆ.
ಪೊಲೀಸ್ ಬಿಗಿ ಬಂದೋಬಸ್ತ್: ಅಮಿತ್ ಶಾ ದಕ್ಷಿಣ ಕನ್ನಡ ಜಿಲ್ಲೆಯ ಭೇಟಿ ಹಿನ್ನೆಲೆಯಲ್ಲಿ ಮಂಗಳೂರು ಹಾಗೂ ಪುತ್ತೂರಿನಲ್ಲಿ ಪೊಲೀಸರು ಬಿಗಿ ಬಂದೋಬಸ್ತು ವ್ಯವಸ್ಥೆ ಮಾಡಲಾಗಿದೆ. ಪುತ್ತೂರಿನಲ್ಲಿ 11 ಕೆಎಸ್ಆರ್ಪಿ ಸೇರಿದಂತೆ 1,000 ಮಂದಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೇ ವಿವಿಧ ಜಿಲ್ಲೆಗಳ ಎಸ್ಪಿ, ಡಿವೈಎಸ್ಪಿಗಳು ಮತ್ತು ಇನ್ಸ್ಪೆಕ್ಟರ್ಗಳನ್ನು ನಿಯೋಜನೆ ಮಾಡಲಾಗಿದೆ. ಮಂಗಳೂರಿನಲ್ಲೂ ಅಮಿತ್ ಶಾ ಅವರು ಬರುವ ಸ್ಥಳದ ಒಂದೆರಡು ಕಿ.ಮೀ. ವ್ಯಾಪ್ತಿಯಲ್ಲಿ ಬ್ಯಾರಿಕೇಡ್ಗಳನ್ನು ಹಾಕಲಾಗಿದ್ದು, ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಕಾರ್ಯಕ್ರಮದ ಪಟ್ಟಿಯಲ್ಲಿ ಬದಲಾವಣೆ: ಮೊದಲು ನಿರ್ಧರಿಸಿದಂತೆ ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮದ ಬಳಿಕ ಅಮಿತ್ ಶಾ ಅವರು ಕ್ಯಾಂಪ್ಕೋ ಫ್ಯಾಕ್ಟರಿ ವೀಕ್ಷಣೆ ಮಾಡುವವರಿದ್ದರು. ಆದರೆ ಅದನ್ನು ರದ್ದುಪಡಿಸಲಾಗಿದೆ. ಕ್ಯಾಂಪ್ಕೋ ಸುವರ್ಣ ಮಹೋತ್ಸವದ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ನೇರವಾಗಿ ಹೆಲಿಕಾಪ್ಟರ್ ಮೂಲಕ ಅವರು ಮಂಗಳೂರಿಗೆ ಬರಲಿದ್ದಾರೆ. ಈ ಕಾರಣದಿಂದ 5.05 ಕ್ಕೆ ಅಮಿತ್ ಶಾ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ.
ಇದನ್ನೂ ಓದಿ: ರೈತರಿಂದ ಜಿಡಿಪಿಗೆ ಶೇ.18 ಕೊಡುಗೆ, ಅನ್ನದಾತರ ಕಲ್ಯಾಣಕ್ಕೆ ಸರ್ಕಾರ ಬದ್ಧ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ