ಮಂಗಳೂರು: ಪಿಎಚ್ಡಿ ಬರೆಯುತ್ತಿದ್ದ ವಿದ್ಯಾರ್ಥಿನಿಯಲ್ಲಿ ಪ್ರಬಂಧ ಅಂಗೀಕಾರಕ್ಕೆ ಲಂಚ ಪಡೆದಿದ್ದ ಮಂಗಳೂರು ವಿವಿಯ ಸಹಾಯಕ ಪ್ರೊಫೆಸರ್ಗೆ ದ.ಕ ಜಿಲ್ಲೆಯ ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯ 3 ವರ್ಷ ಶಿಕ್ಷೆ ವಿಧಿಸಿ ಆದೇಶಿಸಿದೆ.
ಪಿ.ಹೆಚ್.ಡಿ. ವಿದ್ಯಾರ್ಥಿನಿ ಪ್ರೇಮ ಡಿ'ಸೋಜ ಎಂಬವರ ಪ್ರಬಂಧ ಅಂಗೀಕರಿಸಲು ಮಂಗಳೂರು ಯುನಿವರ್ಸಿಟಿಯ ಸಮಾಜ ಶಾಸ್ತ್ರದ ಸಹಾಯಕ ಪ್ರೊಫೆಸರ್ ಆಗಿರುವ ಡಾ.ಅನಿತಾ ರವಿಶಂಕರ್ ಲಂಚದ ಬೇಡಿಕೆಯಿಟ್ಟಿದ್ದರು. ಮೈಸೂರಿನಿಂದ ಬರುವ ಬಾಹ್ಯ ಪರಿವೀಕ್ಷಕರ ಹಣ ರೂ 16,800 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದ ಇವರು ಮುಂಗಡ ಹಣ ರೂ. 5,000 ವನ್ನು ಸ್ವೀಕರಿಸುತ್ತಿದ್ದ ವೇಳೆ 2012 ಡಿಸೆಂಬರ್ 4ರಂದು ಲೋಕಾಯುಕ್ತ ದಾಳಿ ನಡೆದಿತ್ತು.
ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ದಾಳಿ ಮಾಡಿ ಡಾ.ಅನಿತಾ ರವಿಶಂಕರ್ ಅವರನ್ನು ಬಂಧಿಸಿದ್ದರು. ಇವರು ಮೊದಲು ರೂ. 10,000, ನಂತರ ರೂ 4,000 ಮತ್ತು ತದನಂತರ ರೂ. 16,800 ಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು.
ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು, ವಿಶೇಷ ಸರಕಾರಿ ಅಭಿಯೋಜಕ ಕೆ. ಎಸ್.ಎನ್. ರಾಜೇಶ್ ವಾದವನ್ನು ಪುರಸ್ಕರಿಸಿ, ಆರೋಪಿಯ ಮೇಲಿನ ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದು ಆರೋಪಿಗೆ ಶಿಕ್ಷೆ ವಿಧಿಸಿದೆ.
ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ. ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.
ಇದನ್ನೂ ಓದಿ: ಯುಪಿ ಪೊಲೀಸರ ನೋಟಿಸ್ ಪ್ರಶ್ನಿಸಿ ಟ್ವಿಟರ್ ಎಂಡಿ ಅರ್ಜಿ: ಜು.13ಕ್ಕೆ ಹೊರಬೀಳಲಿದೆ ಹೈಕೋರ್ಟ್ ಆದೇಶ
ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 7 ರ ಅಡಿಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ ಎರಡು ವರ್ಷ ಸಾದಾ ಸಜೆ ಮತ್ತು ರೂ. 15,000 ದಂಡ. ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ ಮೂರು ವರ್ಷ ಸಾದಾ ಸಜೆ ಮತ್ತು ರೂ. 15,000 ದಂಡ.ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳುಗಳ ಸಾದಾ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಆದರೆ ಎರಡೂ ಅಪರಾಧಕ್ಕೆ ಸಂಬಂಧಿಸಿದ ಶಿಕ್ಷೆಗಳನ್ನು ಅಪರಾಧಿ ಜೊತೆಯಾಗಿ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ. ಹೀಗಾಗಿ ಇವರಿಗೆ ಒಟ್ಟು ಮೂರು ವರ್ಷ ಸಜೆಯಾಗಿದೆ.
ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಉಮೇಶ್ ಜಿ. ಶೇಟ್ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಮಂಗಳೂರು ಲೋಕಾಯುಕ್ತ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು.