ಮಂಗಳೂರು: ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೊರೊನಾ ಸೋಂಕಿತನೊಬ್ಬ ಗುಣಮುಖನಾಗಿರುವ ಬಗ್ಗೆ ವೈದ್ಯರು ಬಹಿರಂಗಪಡಿಸಿದ್ದಾರೆ.
ಮಾರ್ಚ್ 19 ರಂದು ಕೊರೊನಾ ಸೋಂಕು ದೃಢಗೊಂಡು ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 22 ವರ್ಷದ ಭಟ್ಕಳ ಮೂಲದ ಯುವಕ ಗುಣಮುಖನಾಗಿದ್ದಾನೆ. ಈತನ ಗಂಟಲ ದ್ರವವನ್ನು ಪರೀಕ್ಷೆ ಮಾಡಲಾಗಿದ್ದು, ಅದರಲ್ಲಿ ನೆಗೆಟಿವ್ ಬಂದಿದೆ. ಆತನನ್ನು ನಾಳೆ ಡಿಸ್ಚಾರ್ಜ್ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊರೊನಾ ಸೋಂಕು ಶಂಕೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಇಂದು 21 ಮಂದಿಯ ಮಾದರಿಯನ್ನು ಪರೀಕ್ಷೆಗೆ ರವಾನೆ ಮಾಡಲಾಗಿದೆ. ಹಿಂದೆ ಪರೀಕ್ಷೆಗೆಂದು ಕಳುಹಿಸಿರುವ 28 ಮಂದಿಯ ಗಂಟಲು ದ್ರವದ ವರದಿ ನೆಗೆಟಿವ್ ಬಂದಿದೆ. ಅಲ್ಲದೇ 3 ಮಂದಿ ಮೇಲೆ ನಿಗಾವಹಿಸಲಾಗಿದೆ. ಇಂದು 86 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದ್ದು, 4,461 ಮಂದಿಯನ್ನು ಹೋಂ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ. ಮಂಗಳೂರಲ್ಲಿ ಈವರೆಗೆ 38,631 ಮಂದಿಯನ್ನು ಸ್ಕ್ರೀನಿಂಗ್ ಮಾಡಲಾಗಿದೆ. 15 ಮಂದಿಯನ್ನು ಮಂಗಳೂರಿನ ಇಎಸ್ಐ ಹಾಸ್ಪಿಟಲ್ ನಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, 1,342 ಮಂದಿ 28 ದಿನಗಳ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ. ಈ ವರೆಗೆ 310 ಮಂದಿಯ ಗಂಟಲು ದ್ರವ ಪಡೆಯಲಾಗಿದ್ದು, ಅದರಲ್ಲಿ 298 ಮಂದಿಯ ವರದಿ ನೆಗೆಟಿವ್ ಬಂದಿದೆ. 12 ಮಂದಿಯಲ್ಲಿ ಸೋಂಕು ದೃಢಗೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ.