ಮಂಗಳೂರು: ನಗರದ ವೆಲೆನ್ಸಿಯಾ ಸ್ಟೇಟ್ ಬ್ಯಾಂಕ್ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಗಾಂಜಾ ಮಾರುತ್ತಿದ್ದ ಯುವಕನನ್ನ ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಮತ್ತು ಸಿಸಿಬಿ ಘಟಕದ ಅಧಿಕಾರಿಗಳು ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.
ವೆಲೆನ್ಸಿಯಾ ಉಜ್ಜೋಡಿಯ ಮೂಲದ ಪ್ರೀತಂ.ಜೆ (31) ಬಂಧಿತ ಆರೋಪಿ. ಬಂಧಿತನಿಂದ ಸುಮಾರು 260 ಗ್ರಾಂ ತೂಕದ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಮತ್ತು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಈ ಎಲ್ಲಾ ವಸ್ತುಗಳ ಒಟ್ಟು ಮೌಲ್ಯ ₹ 90,220 ರೂಪಾಯಿ ಎಂದು ಅಂದಾಜಿಸಲಾಗಿದೆ.
ಎಕನಾಮಿಕ್ ಮತ್ತು ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಯ ಸಿಬ್ಬಂದಿ ಮತ್ತು ಪೊಲೀಸ್ ನಿರೀಕ್ಷಕ ರಾಮಕೃಷ್ಣ ಕೆ.ಕೆ ಹಾಗೂ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶಾಂತರಾಮ ಮತ್ತು ಉಪ- ನಿರೀಕ್ಷಕ ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.