ಕಡಬ: ಸರ್ಕಾರದ ಮಹತ್ವಾಕಾಂಕ್ಷೆಯ ಮುಖ್ಯ ಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಲ್ಲಿ ಕೈಗೆತ್ತಿಕೊಳ್ಳಲಾದ ಸಭಾಂಗಣದ ಕಾಮಗಾರಿ ನಿಧಾನಗತಿಯಲ್ಲಿ ಸಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯತ್ 2015-16ನೇ ಸಾಲಿನ ಮುಖ್ಯಮಂತ್ರಿಗಳ ಗ್ರಾಮ ವಿಕಾಸ ಯೋಜನೆಯಡಿ ಸೇರ್ಪಡೆಗೊಂಡು ಗ್ರಾಮದ ಅಭಿವೃದ್ಧಿಗೆ ರೂ. 75 ಲಕ್ಷ ಅನುದಾನ ಬಿಡುಗಡೆಗೊಂಡಿತ್ತು.
ಅದರಲ್ಲಿ ರೂ.18 ಲಕ್ಷದಲ್ಲಿ ನೂಜಿಬಾಳ್ತಿಲ ಗ್ರಾ.ಪಂ. ಕಛೇರಿಯ ಮೇಲ್ಚಾವಣಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸಭಾಂಗಣದ ಕಾಮಗಾರಿ ಕಳೆದ 5 ವರ್ಷಗಳಿಂದ ಕುಂಟುತ್ತ ಸಾಗುತ್ತಿದೆ. ಜೊತೆಗೆ ಗ್ರಾ.ಪಂ. ಮುಂಭಾಗದಲ್ಲಿ ರೂ. 2.5 ಲಕ್ಷದಲ್ಲಿ ನಡೆಯಬೇಕಾದ ಇಂಟರ್ಲಾಕ್ ಕಾಮಗಾರಿಯೂ ಇನ್ನೂ ಪೂರ್ಣಗೊಂಡಿಲ್ಲ.
ನೂಜಿಬಾಳ್ತಿಲ ಗ್ರಾಮದಲ್ಲಿ ಗ್ರಾಮವಿಕಾಸ ಯೋಜನೆಯಲ್ಲಿ ಕೈಗೆತ್ತಿಕೊಳ್ಳಲಾದ ಬಹುತೇಕ ಕಾಮಗಾರಿಗಳಾದ ರಸ್ತೆ ಕಾಂಕ್ರೀಟೀಕರಣ, ತಡೆಗೋಡೆ ಇತರೆ ಕೆಲಸಗಳೂ ಪೂರ್ಣಗೊಂಡಿದ್ದರೂ ಗ್ರಾ.ಪಂ.ನ ಸಭಾಂಗಣ, ಇಂಟರ್ಲಾಕ್ ಕಾಮಗಾರಿ ಪೂರ್ಣವಾಗದೆ ಹಾಗೆ ಇದೆ. ಈ ಕುರಿತು ನೂಜಿಬಾಳ್ತಿಲ ಗ್ರಾ.ಪಂ. ಹಾಗೂ ಜಿ.ಪಂ. ಸದಸ್ಯರ ನೇತೃತ್ವದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಈ ಬಗ್ಗೆ ಲೋಕಯುಕ್ತಕ್ಕೂ ದೂರು ನೀಡಲಾಗಿದೆ. ಇದರ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದು, ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದಾರೆ.