ಸುಬ್ರಹ್ಮಣ್ಯ (ದಕ್ಷಿಣ ಕನ್ನಡ) ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮಂಡಳಿಯ ವಿರುದ್ಧ ದೇವಾಲಯದ ಆಭರಣಗಳನ್ನು ಅವ್ಯವಹಾರ ನಡೆಸಿರುವ ಆರೋಪ ಕೇಳಿ ಬಂದಿದೆ.
ದೇವಾಲಯದ ಆಡಳಿತಾಧಿಕಾರಿ ಶ್ರೀಮತಿ ರೂಪಾ ಎಂ.ಜೆ ಹಾಗೂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ರವೀಂದ್ರ ಎಂ.ಎಚ್ ವಿರುದ್ಧ ಸುಬ್ರಹ್ಮಣ್ಯದ ನಿವಾಸಿ ಶ್ರೀನಾಥ್ ಟಿ.ಎಸ್ ಮಂಗಳೂರಿನ ಪಶ್ಚಿಮ ವಲಯ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಅಧೀಕ್ಷಕರಿಗೆ ದೂರು ನೀಡಿದ್ದು, ತನಿಖೆ ನಡೆಸುವಂತೆ ಕೋರಿದ್ದಾರೆ
ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಡಳಿತದಲ್ಲಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕೃತ ದಾಖಲಾತಿ ಪುಸ್ತಕದಲ್ಲಿ ದಾಖಲಾಗಿರುವ, ಕೋಟ್ಯಂತರ ರೂಪಾಯಿ ಬೆಲೆ ಬಾಳುವ ವಜ್ರದ ಕಂಠಿಹಾರ, ಆಭರಣಗಳು, ಶ್ರೀ ಸತ್ಯನಾರಾಯಣ ದೇವರ ಫೋಟೋ, ಶ್ರೀ ಕುಕ್ಕೆ ಲಿಂಗ ದೇವಳದ ಬಳಿ ಇದ್ದ ಬೆಳ್ಳಿಯ ಒಡವೆಗಳು, ಪುರಾತನ ಕಾಲದ ವಿಗ್ರಹಗಳು ನಾಪತ್ತೆಯಾಗಿದೆ. ಈ ಬಗ್ಗೆ ದೇವಾಲಯದ ಮಾಜಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮೋನಪ್ಪ ಮಾನಾಡು, 10 ಅಕ್ಟೋಬರ್ 2019 ರಂದೇ ದೇವಾಲಯದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿದ್ದ ರವೀಂದ್ರ ಎಂ.ಎಚ್ ಅವರಿಗೆ ಮಾಹಿತಿ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಬಗ್ಗೆ ಯಾವುದೇ ಮಾಹಿತಿಯನ್ನು ಆಡಳಿತ ಮಂಡಳಿ ನೀಡಿಲ್ಲ ಎನ್ನಲಾಗಿದೆ.
ಈ ವಿಚಾರವಾಗಿ 1 ಆಗಸ್ಟ್ 2020 ರಂದು ರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿಯ ನಿರ್ದೇಶಕ ಶ್ರೀನಾಥ್ ಟಿ.ಎಸ್, ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಆದರೆ, ಇಲ್ಲಿಯವರೆಗೂ ಆಡಳಿತಾಧಿಕಾರಿಯಾಗಲಿ, ಕಾರ್ಯ ನಿರ್ವಹಣಾಧಿಕಾರಿಯಾಗಲಿ ಯಾವುದೇ ಮಾಹಿತಿ ನೀಡಿಲ್ಲ ಎಂದು ದೂರಲಾಗಿದೆ. ಈ ಹಿನ್ನೆಲೆ, ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅರ್ಜಿದಾರರು ಆಗ್ರಹಿಸಿದ್ದಾರೆ. ಅದೇ ರೀತಿ ಕುಕ್ಕೆಯಲ್ಲಿ ನಡೆಯುತ್ತಿರುವ ವಿವಿಧ ಪೂಜಾ ಕಾರ್ಯಕ್ರಮಗಳಲ್ಲೂ ಭಾರಿ ಅವ್ಯವಹಾರ ಮಾಡಲಾಗುತ್ತಿದೆ. ಈ ಬಗ್ಗೆಯೂ ತನಿಖೆ ಮಾಡಬೇಕೆಂದು ಶ್ರೀನಾಥ್ ಅವರು, ಲೋಕಾಯುಕ್ತಕ್ಕೂ ದೂರು ನೀಡಿದ್ದಾರೆ.