ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಯಾಗಿರುವ ರವೀಂದ್ರ ಎಂ ಹೆಚ್ ಅವರನ್ನು ಮೈಸೂರು ಜಿಲ್ಲೆಯ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ರವೀಂದ್ರ ಅವರು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಆಗಿದ್ದು, ಇವರನ್ನು ಈ ಹಿಂದೆ ನಂಜನಗೂಡು ಶ್ರೀಕಂಠೇಶ್ವರ ದೇವಸ್ಥಾನಕ್ಕೆ ವರ್ಗಾವಣೆಗೊಳಿಸಲಾಗಿತ್ತು. ಈ ಸಮಯದಲ್ಲಿ ಕುಕ್ಕೆ ಸುಬ್ರಹ್ಮಣ್ಯದ ಕಾರ್ಯ ನಿರ್ವಹಣಾಧಿಕಾರಿಯಾಗಿ ಪುತ್ತೂರು ಉಪ ವಿಭಾಗಾಧಿಕಾರಿಯವರು ಅಧಿಕಾರ ವಹಿಸಿಕೊಂಡಿದ್ದರು.
ನಂತರದಲ್ಲಿ ರವೀಂದ್ರ ಅವರನ್ನು ಕುಕ್ಕೆ ಸುಬ್ರಹ್ಮಣ್ಯಕ್ಕೆ ಮರು ನಿಯೋಜನೆ ಮಾಡಲಾಗಿತ್ತು. ಇದೀಗ ಪುನಃ ಅವರನ್ನು ಮೈಸೂರಿಗೆ ವರ್ಗಾಯಿಸಲಾಗಿದೆ. ರವೀಂದ್ರ ಎಂ ಹೆಚ್ ಅವರ ಸ್ಥಾನಕ್ಕೆ ಬೆಂಗಳೂರು ಬನಶಂಕರಿಯಲ್ಲಿನ ಶ್ರೀ ಬನಶಂಕರಿ ದೇಗುಲದ ಕಾರ್ಯ ನಿರ್ವಾಹಣಾಧಿಕಾರಿ ನಿಂಗಯ್ಯ ಅವರನ್ನು ನಿಯೋಜನೆಗೊಳಿಸಿ ಸರ್ಕಾರ ಆದೇಶಿಸಿದೆ.