ಮಂಗಳೂರು: ಎರಡು ತಿಂಗಳ ಹಿಂದೆ ಮಲ್ಲೂರಿನ ವ್ಯಕ್ತಿಯೊಬ್ಬರ ಕೊಲೆ ಯತ್ನ ಪ್ರಕರಣದ ಆರೋಪಿಯೊಬ್ಬನನ್ನು ದಕ್ಷಿಣ ಉಪ ವಿಭಾಗ ರೌಡಿ ನಿಗ್ರಹದಳ ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಉಳಾಯಿಬೆಟ್ಟು ನಿವಾಸಿ ಅನ್ಸರ್ (20) ಬಂಧಿತ ಆರೋಪಿ. ಈತ ಮಲ್ಲೂರಿನಲ್ಲಿ ಎರಡು ತಿಂಗಳ ಹಿಂದೆ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ. ಅನ್ಸರ್ನ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಗಳಲ್ಲಿ ಕೋಮು ಗಲಭೆ, ದನ ಕಳ್ಳತನ, ಕೊಲೆ ಯತ್ನ ಸೇರಿದಂತೆ ಏಳು ಪ್ರಕರಣಗಳಿದ್ದು, 2012ರಿಂದ ತಲೆಮರೆಸಿಕೊಂಡಿದ್ದ. ಪೊಲೀಸರು ಈತನಿಗಾಗಿ ಹಲವು ಸಮಯದಿಂದ ಶೋಧ ನಡೆಸುತ್ತಿದ್ದರು.
ಈತ ನಗರದ ಕಣ್ಣೂರು ಬಳಿಯಿರುವ ಬಗ್ಗೆ ಮಾಹಿತಿ ಪಡೆದ ಗ್ರಾಮಾಂತರ ಪೊಲೀಸರು ರೌಡಿ ನಿಗ್ರಹದಳದ ಜತೆಗೂಡಿ ಕಾರ್ಯಾಚರಣೆ ನಡೆಸಿ ಬುಧವಾರ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಿದೆ.