ಕುಕ್ಕೆ ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ರಾಜ್ಯದ ಶ್ರೀಮಂತ ದೇವಸ್ಥಾನಗಳಲ್ಲೊಂದಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಹಲವು ಲೋಪದೋಷಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಸಮಗ್ರ ತನಿಖೆ ನಡೆಸಲು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ.
ದೇವಸ್ಥಾನದಲ್ಲಿ ನಡೆಯುತ್ತಿರುವ 180 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲಾನ್ ಯೋಜನೆಯ ಒಳಚರಂಡಿ ಮತ್ತು ವಸತಿ ಸಮುಚ್ಛಯ ಕಾಮಗಾರಿಗಳು ಕಳಪೆಯಾಗಿವೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಎಚ್ಚೆತ್ತುಕೊಂಡಿರುವ ಸರ್ಕಾರ ಎಲ್ಲಾ ಕಾಮಗಾರಿಗಳ ತನಿಖೆ ನಡೆಸಲು ತೀರ್ಮಾನಿಸಿದೆ.
ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕುಕ್ಕೆ ಕ್ಷೇತ್ರವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸುಮಾರು 180 ಕೋಟಿ ರೂ. ವೆಚ್ಚದ ಮಾಸ್ಟರ್ ಪ್ಲಾನ್ ತಯಾರಿಸಲಾಗಿದೆ. ಯೋಜನೆಯಡಿಯಲ್ಲಿ ಕಾಮಗಾರಿ ಪೂರ್ಣಗೊಂಡಿರುವ ಮಲಿನ ನೀರಿನ ಶುದ್ಧೀಕರಣ ಘಟಕ ಸಂಪೂರ್ಣ ವಿಫಲವಾಗಿದ್ದು, 70 ಕೋಟಿ ರೂ. ವೆಚ್ಚದ ಒಳಚರಂಡಿ ನೀರಿನ ಶುದ್ದೀಕರಣ ಘಟಕದ ಸಮರ್ಪಕ ನಿರ್ವಹಣೆಯಿಲ್ಲದೆ, ಕೊಳಚೆ ನೀರು ಕುಮಾರಧಾರ ನದಿ ಸೇರುತ್ತಿದೆ. ಇದೇ ನೀರು ತೀರ್ಥಸ್ನಾನ ಘಟ್ಟಕ್ಕೆ ಮತ್ತು ಕುಡಿಯುವ ನೀರಿನ ಡ್ಯಾಂಗಳಿಗೂ ಹರಿಯುತ್ತಿದೆ.ಆದಿ ಸುಬ್ರಹ್ಮಣ್ಯದಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದ 180 ಕೊಠಡಿಗಳಿರುವ ಕಟ್ಟಡದ ಕಾಮಗಾರಿ ಮುಗಿದು 5 ವರ್ಷಗಳಾಗಿದ್ದರೂ, ವಸತಿ ಸಮುಚ್ಚಯ ಭಕ್ತರ ಉಪಯೋಗಕ್ಕೆ ಬಳಸಿಕೊಂಡಿಲ್ಲ. ಈ ವಸತಿ ಸಮುಚ್ಚಯದ ಪೀಠೋಪಕರಣ ವ್ಯವಸ್ಥೆಗಾಗಿ ಮತ್ತೆ ಹೆಚ್ಚುವರಿಯಾಗಿ 4.90 ಕೋಟಿ ರೂ. ವೆಚ್ಚ ಮಾಡಲಾಗಿದೆ. ಇದರ ಟೆಂಡರ್ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಕಾಯ್ದುಕೊಳ್ಳಲಾಗಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ಹೀಗಾಗಿ, ಈ ಎಲ್ಲಾ ಅವ್ಯವಹಾರಗಳ ತನಿಖೆ ನಡೆಸಲು ಸಚಿವ ಕೋಟ ಶ್ರಿನಿವಾಸ ಪೂಜಾರಿ ಮುಂದಾಗಿದ್ದು, ಒಳಚರಂಡಿ ಕಾಮಗಾರಿ ನಡೆಸಿದ ಅಧಿಕಾರಿಗಳಿಂದ ವಾರದೊಳಗೆ ಸಮಗ್ರ ಮಾಹಿತಿ ಪಡೆಯಲು ನಿರ್ಧರಿಸಿದ್ದಾರೆ. ಅಲ್ಲದೆ. ಮಾಸ್ಟರ್ ಪ್ಲಾನ್ ಯೋಜನೆಗೆ ತಡೆಯಾಗಿರುವ ಸಂಪುಟ ನರಸಿಂಹ ಮಠದ ವ್ಯಾಜ್ಯವನ್ನೂ ಬಗೆಹರಿಸುವ ತೀರ್ಮಾನಕ್ಕೆ ಬರಲಾಗಿದೆ. ಬಿ.ಎಸ್. ಯಡಿಯೂರಪ್ಪ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಕುಕ್ಕೆ ಸುಬ್ರಹ್ಮಣ್ಯದ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಯೋಜನೆಯನ್ನು ಘೋಷಿಸಲಾಗಿತ್ತು. ಆದರೆ, ಯೋಜನೆಯ ಕಾಮಗಾರಿಗಳು ಆರಂಭಗೊಂಡು 12 ವರ್ಷಗಳು ಕಳೆದರೂ, ಇಂದಿಗೂ ಕೇವಲ 40 ಶೇ. ಕಾಮಗಾರಿಗಳು ಮಾತ್ರ ಪೂರ್ಣಗೊಂಡಿವೆ. ಅವುಗಳಲ್ಲೂ ಕಳಪೆ ಕಾಮಗಾರಿಯ ಆರೋಪ ಕೇಳಿ ಬಂದಿದೆ. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ದೇವಸ್ಥಾನಗಳ ಅಭಿವೃದ್ಧಿ ಕಾಮಗಾರಿಗಳ ಗುತ್ತಿಗೆದಾರರಿಗೆ ಈ ಹಿಂದೆ ಮುಂಗಡವಾಗಿ ಹಣ ಪಾವತಿಸುವ ವ್ಯವಸ್ಥೆಯಿತ್ತು. ಇದೀಗ ಸರ್ಕಾರ ಈ ವ್ಯವಸ್ಥೆಯನ್ನು ಬದಲಿಸಿದ್ದು, ಕಾಮಗಾರಿ ಪೂರ್ಣಗೊಂಡ ಬಳಿಕವೇ ಹಣ ಪಾವತಿಸಲು ತೀರ್ಮಾನಿಸಿದೆ.