ಬಂಟ್ವಾಳ: ನರಿಕೊಂಬು ಗ್ರಾಮದಲ್ಲಿ 18.29 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೆ ಸಜ್ಜಾಗಿರುವ ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿಯನ್ನು ಇಂದು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಉಪಸ್ಥಿತಿಯಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಭೇಟಿ ನೀಡಿ ವೀಕ್ಷಿಸಿದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರಿಕೊಂಬು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ನರಿಕೊಂಬು, ಶಂಭೂರು, ಬಾಳ್ತಿಲ, ಗೋಳ್ತಮಜಲು ಹಾಗೂ ಅಮ್ಟೂರು ಗ್ರಾಮಗಳ 38 ಜನವಸತಿ ಕೇಂದ್ರಗಳಿಗೆ ಕುಡಿಯುವ ನೀರು ಸಿಗಲಿದೆ. ಈಗಾಗಲೇ ಪ್ರಾಯೋಗಿಕವಾಗಿ ನೀರು ಸರಬರಾಜು ಮಾಡಲಾಗಿದ್ದು, ಮುಂದೆ ಯೋಜನೆ ಫಲಪ್ರದವಾಗುವುದರಲ್ಲಿ ಸಂದೇಹವಿಲ್ಲ ಎಂದರು.
ತಮ್ಮ ಅಧಿಕಾರಾವಧಿಯಲ್ಲಿ ಯೋಜನೆಗಳನ್ನು ಕ್ಷೇತ್ರದಲ್ಲಿ ಮಂಜೂರು ಮಾಡಲು ಸಹಕರಿಸಿದ ಹಿಂದಿನ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅಧಿಕಾರಿ ವರ್ಗಕ್ಕೆ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.