ಮಂಗಳೂರು: ಕೋವಿಡ್ -19 ರೋಗ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು(ಮಾ.18) ಮಂಗಳೂರಿನಲ್ಲಿ 632 ಜನರಿಗೆ ಸ್ಕ್ರೀನಿಂಗ್ ನಡೆಸಲಾಗಿದೆ. 3 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದೇಶದಿಂದ ಬಂದವರಿಗೆ ವಿಮಾನ ನಿಲ್ದಾಣದಲ್ಲಿ ಸ್ಕ್ರೀನಿಂಗ್ ಮಾಡಲಾಗಿದೆ. ಇಬ್ಬರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೇ 687 ಮಂದಿಯನ್ನು ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲಾಗಿದೆ. ನಿನ್ನೆ(ಮಾ.17) ಗಂಟಲು ದ್ರವ ಪರೀಕ್ಷೆ ಕಳುಹಿಸಿದ್ದ 14 ಮಂದಿಯ ಸ್ಯಾಂಪಲ್ ನೆಗೆಟಿವ್ ಬಂದಿದೆ ಎಂದು ಸ್ಪಷ್ಟನೆ ನೀಡಿದರು.
ಜಿಲ್ಲೆಯಾದ್ಯಂತ ಆಶಾ ಕಾರ್ಯಕರ್ತೆಯರು ಮನೆ - ಮನೆಗೆ ತೆರಳಿ ಕೊರೊನಾದ ವೈರಸ್ ಜಾಗೃತಿ ಮೂಡಿಸುತ್ತಿದ್ದು, ಈವರೆಗೆ 55,241 ಮನೆಗಳಿಗೆ ಭೇಟಿ ನೀಡಲಾಗಿದೆ. ಸುಮಾರು 2,12,639 ಮಂದಿಯನ್ನು ಸಂಪರ್ಕಿಸಿ ಜಾಗೃತಿ ಮೂಡಿಸಲಾಗಿದೆ. ವಿದೇಶದಿಂದ ಬಂದ ಪ್ರಯಾಣಿಕರು ಮನೆಯಲ್ಲಿಯೇ ಇರುವಂತೆ ಮಾಹಿತಿ ನೀಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣ ಹೊರತುಪಡಿಸಿ ಇತರೆಡೆಯಿಂದ ಬಂದವರನ್ನು ಮನೆಯಲ್ಲಿಯೇ ವೈದ್ಯಕೀಯ ವ್ಯವಸ್ಥೆಯಲ್ಲಿ ಇರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.