ಸುಬ್ರಹ್ಮಣ್ಯ: ದೇವರಿಗೆ ಸಲ್ಲಿಸುವ ವಿಶಿಷ್ಟ ಸೇವೆಯಲ್ಲೊಂದಾದ ಬೀದಿ ಉರುಳು ಸೇವೆಯನ್ನು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರು ನಡೆಸುತ್ತಿದ್ದಾರೆ.
ಉರುಳು ಸೇವೆಗೂ ಮೊದಲು ಭಕ್ತರು ಕುಮಾರಧಾರ ನದಿಯಲ್ಲಿ ಸ್ನಾನ ಮಾಡಿ ಅಲ್ಲಿಂದ ರಾಜರಸ್ತೆ, ರಥಬೀದಿಯಲ್ಲಿ ಉರುಳಿಕೊಂಡು ದೇವಳಕ್ಕೆ ಬಂದು ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕಿ, ಮೂಡು ಬಾಗಿಲಿನಲ್ಲಿ ಹೊರ ಹೋಗಿ ಎದುರಿನ ದರ್ಪಣ ತೀರ್ಥ ನದಿಯಲ್ಲಿ ಸ್ನಾನ ಮಾಡಿ ನಂತರ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸುತ್ತಾರೆ.
ಕುಮಾರಧಾರದಿಂದ ಚತುಷ್ಪಥ ಕಾಂಕ್ರೀಟ್ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಒಂದು ಭಾಗವನ್ನು ಉರುಳು ಸೇವೆಗಾಗಿಯೇ ವ್ಯವಸ್ಥೆಗೊಳಿಸಲಾಗಿದೆ. ಈ ಭಾಗದಲ್ಲಿ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಾಗಿದ್ದು, ರಸ್ತೆಯುದ್ದಕ್ಕೂ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಜೊತೆಗೆ ಜಾತ್ರಾ ಮಹೋತ್ಸವದ ಭಾಗವಾಗಿ ವಿದ್ಯುತ್ ಸೌಕರ್ಯವನ್ನು ಕಲ್ಪಿಸಲಾಗಿದೆ. ಸಿಬ್ಬಂದಿ ಪ್ರತಿ ದಿನ ರಸ್ತೆ ಸ್ವಚ್ಛ ಮಾಡಿ, ಧೂಳು ತೆಗೆಯುವ ಕಾರ್ಯ ಮಾಡುತ್ತಿದ್ದಾರೆ.
ಇನ್ನು ಈ ಬಾರಿ ಕಾಂಕ್ರೀಟ್ ರಸ್ತೆಯಲ್ಲಿ ಉರುಳು ಸೇವೆ ಮಾಡಬೇಕಾದ ಹಿನ್ನೆಲೆ ಮತ್ತು ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಭಕ್ತರಿಗೆ ತೊಂದರೆಯಾಗದಂತೆ ಸಂಜೆ, ರಾತ್ರಿ ಮತ್ತು ಮುಂಜಾನೆ ಸೇವೆಯನ್ನು ಆರಂಭಿಸಬೇಕು ಎಂದು ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಆಡಳಿತಾಧಿಕಾರಿಗಳು ಸೇವಾರ್ಥಿಗಳಲ್ಲಿ ವಿನಂತಿ ಮಾಡಿದ್ದಾರೆ.