ಬಂಟ್ವಾಳ: ಭಾನುವಾರ ಉದ್ಘಾಟನೆಗೊಳ್ಳುವ ಬಂಟ್ವಾಳ ತಾಲೂಕಿನ ಸರಪಾಡಿ ಬಹುಗ್ರಾಮ ಕುಡಿಯುವ ನೀರು ಯೋಜನೆ ಘಟಕಕ್ಕೆ ಶನಿವಾರ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ನೇತೃತ್ವದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ಆಗಮಿಸುವುದನ್ನು ವಿರೋಧಿಸಿದ ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಬಳಿಕ ಪೊಲೀಸರ ಮಧ್ಯಪ್ರವೇಶದ ನಂತರ ಪರಿಸ್ಥಿತಿ ತಿಳಿಯಾಯಿತು.
ಸರಪಾಡಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಘಟಕಕ್ಕೆ ತಾಲೂಕು ಪಂಚಾಯಿತಿ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಬಾಸ್ ಆಲಿ ಭೇಟಿ ನಿಗದಿಯಾಗಿದ್ದು, ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ ಆಗಮಿಸುವ ಸುಳಿವು ಪಡೆದ ಬಿಜೆಪಿ ಕಾರ್ಯಕರ್ತರು ಅದನ್ನು ವಿರೋಧಿಸಿದರು.
ಇದೇ ವೇಳೆ ಘಟಕದ ಒಳಗೆ ಅಧಿಕಾರಿಗಳನ್ನು ಹೊರತುಪಡಿಸಿದರೆ ಯಾರಿಗೂ ಪ್ರವೇಶವಿಲ್ಲ ಎಂದು ಸ್ಥಳದಲ್ಲಿದ್ದ ಎಸ್ಐಗಳಾದ ಅವಿನಾಶ್ ಮತ್ತು ಪ್ರಸನ್ನ ಕಟ್ಟುನಿಟ್ಟಿನ ಬಂದೋಬಸ್ತ್ ವಿಧಿಸಿ ಯಾರನ್ನೂ ಪ್ರವೇಶಿಸದಂತೆ ತಡೆದರು. ಈ ಸಂದರ್ಭ ಧಿಕ್ಕಾರ, ಜೈಕಾರ ಸಹಿತ ತಮ್ಮ ಪಕ್ಷದ ನಾಯಕರ ಪರವಾದ ಘೋಷಣೆಗಳನ್ನು ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಕೂಗಿದರು.
ಇದೇ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಅದು ತಾರಕಕ್ಕೇರಿದೆ. ಆಗ ಸ್ಥಳಕ್ಕೆ ಆಗಮಿಸಿದ ಬಂಟ್ವಾಳ ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಎರಡೂ ತಂಡಗಳ ನಡುವೆ ಮಾತುಕತೆ ನಡೆಸಿ ಪರಿಸ್ಥಿತಿ ತಿಳಿಯಾಗಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಗೇಟ್ ಮುಂಭಾಗದಿಂದ ತೆರಳಿದ ಬಳಿಕ ಸ್ಥಳದಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮತ್ತು ಮಾಜಿ ಸಚಿವ ಬಿ.ರಮಾನಾಥ ರೈ, ಇದೊಂದು ರಾಜಕೀಯ ಪ್ರೇರಿತ ಘಟನೆಯಾಗಿದ್ದು, ಜನಪ್ರತಿನಿಧಿಗಳಿಗೂ ಒಳಗೆ ಪ್ರವೇಶಿಸದಂತೆ ಮಾಡಿರುವುದು ಸರಿಯಲ್ಲ ಎಂದರು. ತಾನು ಸಚಿವನಾಗಿದ್ದಾಗ ಯೋಜನೆಗೆ 33.15 ಕೋಟಿ ರೂ. ಅನುದಾನ ಒದಗಿಸಿದ್ದನ್ನು ರೈ ನೆನಪಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ.ಎಸ್.ಮುಹಮ್ಮದ್, ಪದ್ಮಶೇಖರ್ ಜೈನ್ ಸಹಿತ ಸ್ಥಳೀಯ ಮುಖಂಡರು ಸ್ಥಳದಲ್ಲಿ ರೈ ನೇತೃತ್ವದಲ್ಲಿ ಧರಣಿ ಕುಳಿತ ಘಟನೆಯೂ ನಡೆಯಿತು.
ಬಿಜೆಪಿಯಿಂದ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಸುದರ್ಶನ ಬಜ, ಯುವ ಮೋರ್ಚಾ ತಾಲೂಕು ಅಧ್ಯಕ್ಷ ಪ್ರದೀಪ್ ಅಜ್ಜಿಬೆಟ್ಟು, ಪ್ರಮುಖರಾದ ಯಶೋಧರ ಕರ್ಬೆಟ್ಟು ಸಹಿತ ಹಲವು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.