ದಾವಣಗೆರೆ: ಕುರುಬ ಸಮುದಾಯದ ಪ್ರಭಾವಿ ಸ್ವಾಮೀಜಿ ಈಶ್ವರಾನಂದಪುರಿ ಅವರನ್ನು ಕಾನೂನು ಸಚಿವ ಜೆ. ಸಿ. ಮಾಧುಸ್ವಾಮಿ ನಿಂದಿಸಿದ್ದಾರೆ ಎಂದು ಆರೋಪಿಸಿರುವ ಜಿಲ್ಲಾ ಕುರುಬರ ಸಂಘಟನೆ ಸಚಿವರು ಕೂಡಲೇ ಕ್ಷಮೆಯಾಚಿಸಬೇಕು. ಸಿಎಂ ಯಡಿಯೂರಪ್ಪ ಇಂಥ ಸಚಿವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಆಗ್ರಹಿಸಿದೆ.
ಈ ಬಗ್ಗೆ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ರಾಜ್ ಕುಮಾರ್, ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ. ಕುರುಬರನ್ನು ಕೆಣಕಿದರೆ ಪರಿಣಾಮ ಎದುರಿಸಬೇಕಾಗುತ್ತದೆ. ರಾಜ್ಯಾದ್ಯಂತ ಸಚಿವ ಮಾಧುಸ್ವಾಮಿ ತಲೆದಂಡಕ್ಕೆ ಒತ್ತಾಯಿಸಿ ಬೀದಿಗಿಳಿಯುವುದು ನಿಶ್ಚಿತ ಎಂದು ಎಚ್ಚರಿಕೆ ನೀಡಿದರು.
ನಾನು ಒಂದು ಸಮುದಾಯಕ್ಕೆ ಸೇರಿದವನು ಅಂತಾ ಮಾಧುಸ್ವಾಮಿ ಹೇಳಿದ್ದಾರೆ. ಎಲ್ಲಾ ಸಮುದಾಯಕ್ಕೂ ಅವರು ಸಚಿವರು. ಸಿಎಂ ಯಡಿಯೂರಪ್ಪ ಹಾಗೂ ಮಾಧುಸ್ವಾಮಿ ಭಾಗವಹಿಸುವ ಸಮಾರಂಭಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು. ನಮಗೆ ಸಿದ್ಧಗಂಗಾ ಶ್ರೀಗಳ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ. ಯಾವ ಸಮುದಾಯದ ವಿರೋಧಿಗಳಲ್ಲ ಎಂದು ರಾಜ್ಕುಮಾರ್ ಹೇಳಿದ್ರು.