ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಪ್ರದೇಶಗಳಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ತಡೆಯುವ ಕುರಿತು ಸಭೆ ನಡೆಸಲಾಯಿತು.
ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ಅಧ್ಯಕ್ಷತೆಯಲ್ಲಿ ದೂಡಾ ಕಚೇರಿಯಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಪ್ರಾಧಿಕಾರದ ವ್ಯಾಪ್ತಿಯ ಕಂದಾಯ ಭೂಮಿಯಲ್ಲಿ ಬರುವ ದೊಡ್ಡಬೂದಿಹಾಳು, ದೊಡ್ಡಬಾತಿ, ಚಿಕ್ಕಬೂದಿಹಾಳು ಹಾಗೂ ಇತರೆ ಪ್ರದೇಶಗಳಲ್ಲಿ ಅನಧಿಕೃತ ಬಡಾವಣೆಗಳು ನಿರ್ಮಾಣವಾಗುತ್ತಿವೆ. ಇಂತಹ ಅನಧಿಕೃತ ಬಡಾವಣೆಗಳ ನಿರ್ಮಾಣವನ್ನು ತಡೆಯುವ ಕುರಿತು ಚರ್ಚಿಸಲಾಯಿತು.
ಅನಧಿಕೃತ ಬಡಾವಣೆಗಳನ್ನು ತೆರವುಗೊಳಿಸಲು ಏಳು ದಿನಗಳ ಕಾಲಾವಕಾಶ ನೀಡುವಂತೆ ಸಭೆಯಲ್ಲಿ ಅಧ್ಯಕ್ಷರು ಸೂಚಿಸಿದ್ದಾರೆ. ಇನ್ಮುಂದೆ ಹೀಗೆ ಅನಧಿಕೃತ ಬಡಾವಣೆಗಳಲ್ಲಿನ ನಿವೇಶನಗಳನ್ನು ನೋಂದಣಿ ಮಾಡಿಕೊಳ್ಳಬಾರದೆಂದು ಹಾಗೂ ಖಾತೆಗಳನ್ನು ನೋಂದಣಿ ಮಾಡಿಕೊಳ್ಳದಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಯಿತು. ಸಭೆಯಲ್ಲಿ ದೂಡಾ ಆಯುಕ್ತ ಬಿ ಟಿ ಕುಮಾರಸ್ವಾಮಿ, ಹರಿಹರ ನಗರಸಭೆ ಪೌರಾಯುಕ್ತೆ ಲಕ್ಷ್ಮೀದೇವಿ, ಪಾಲಿಕೆ ಉಪ ಆಯುಕ್ತ ಪ್ರಭು, ಕಂದಾಯ ಇಲಾಖೆ ಸಿಬ್ಬಂದಿ ಹಾಜರಿದ್ದರು.