ದಾವಣಗೆರೆ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.
ಉಪನ್ಯಾಸಕರಿಗೆ ವೇತನ ತಾರತಮ್ಯ ಮಾಡಲಾಗಿದೆ, ಲಿಖಿತ ಭರವಸೆಯಂತೆ ಎರಡನೇ ಹೆಚ್ಚುವರಿ ವೇತನ ಬಡ್ತಿ ನೀಡಬೇಕೆಂದು ಆಗ್ರಹಿಸಿದರು. ಪಿಯು ಉಪನ್ಯಾಸಕರ ಬೇಡಿಕೆ ಈಡೇರಿಕೆಗಾಗಿ ದ್ವಿತೀಯ ಪಿಯು ಪರೀಕ್ಷೆ ಮೌಲ್ಯಮಾಪನವನ್ನು ಬಹಿಷ್ಕರಿಸಿ ಹೋರಾಟ ನಡೆಸಿದಾಗ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತದೆ ಎಂದು ದೂರಲಾಗುತ್ತಿತ್ತು. ಹೀಗಾಗಿ ಈ ಬಾರಿ 2020ರಲ್ಲಿ ನಡೆಯುವ ದ್ವಿತೀಯ ಪಿಯು ಮೌಲ್ಯಮಾಪನದಿಂದ ದೂರ ಉಳಿಯಲು ನಿರ್ಧರಿಸಲಾಗಿದ್ದು, ಈಗಿನಿಂದಲೇ ಹೋರಾಟ ಆರಂಭಿಸಿದ್ದೇವೆ ಎಂದು ಪ್ರತಿಭಟನಾಕಾರರು ತಿಳಿಸಿದರು.
2008ರ ಆಗಸ್ಟ್ 1ರ ಬಳಿಕ ಆಯ್ಕೆಯಾದ ಉಪನ್ಯಾಸಕರಿಗೆ ನೀಡುತ್ತಿದ್ದ ಎಕ್ಸ್ಗ್ರೇಷಿಯಾವನ್ನು ಮೂಲ ವೇತನದಲ್ಲಿ ವಿಲೀನಗೊಳಿಸಬೇಕು. ಮರು ಪಾವತಿಸುವಂತೆ ಮಾಡಿರುವ ಆದೇಶವನ್ನು ಹಿಂದಕ್ಕೆ ಪಡೆಯಬೇಕು ಎಂಬುದು ಸೇರಿ ಒಟ್ಟು 21 ಬೇಡಿಕೆಗಳನ್ನು ಸರ್ಕಾರ ಮನಗಂಡು ಈಡೇರಿಸಬೇಕು ಎಂದು ಆಗ್ರಹಿಸಿದರು.