ಹರಿಹರ: ತಿಂಗಳಿಗೊಮ್ಮೆ ನಿಯಮಿತವಾಗಿ ವೇತನ ವಿತರಣೆಗೆ ಆಗ್ರಹಿಸಿ ರಾಜ್ಯ ಆರೋಗ್ಯ ಸಹಾಯಕರ ಮತ್ತು ಮೇಲ್ವಿಚಾರಕರ ಸಂಘದಿಂದ ನಗರದಲ್ಲಿ ತಹಸೀಲ್ದಾರ್ ಕೆ.ಬಿ.ರಾಮಚಂದ್ರಪ್ಪರಿಗೆ ಮನವಿ ನೀಡಲಾಯಿತು.
ಸಂಘದ ತಾಲೂಕು ಅಧ್ಯಕ್ಷ ಎಂ.ಉಮಣ್ಣ ಮಾತನಾಡಿ, ಆರೋಗ್ಯ ಸಹಾಯಕ ವೃಂದದವರಿಗೆ ರಾಜ್ಯದಲ್ಲಿ 3ರಿಂದ 6 ತಿಂಗಳಿಗೊಮ್ಮೆ ವೇತನ ನೀಡಲಾಗುತ್ತಿದೆ. ಇದರಿಂದ ಜೀವನ ನಿರ್ವಹಣೆ ಮಾಡುವುದು ಕಷ್ಟಕರವಾಗಿದೆ. ತಿಂಗಳಿಗೊಮ್ಮೆ ನಿಯಮಿತವಾಗಿ ವೇತನ ನೀಡಲು ಈ ಹಿಂದೆ ಆರೋಗ್ಯ ಇಲಾಖೆ ನಿರ್ದೇಶಕರು, ಸರ್ಕಾರದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಸಂಬಂಧಿಸಿದ ರಾಜ್ಯಮಟ್ಟದ ಅಧಿಕಾರಿಗಳಿಗೆ ಮನವಿ ನೀಡಲಾಗಿದೆ. ಆದರೂ ಕೂಡ ಆರೋಗ್ಯ ಸಹಾಯಕರು ವೇತನಕ್ಕಾಗಿ ಪರದಾಡುವುದು ತಪ್ಪಿಲ್ಲವೆಂದು ಅಸಮಾಧಾನ ಹೊರ ಹಾಕಿದರು.
ಸಾರ್ವಜನಿಕರ ಆರೋಗ್ಯ ಕಾಪಾಡುವ ಹೊಣೆ ಹೊತ್ತ ಆರೋಗ್ಯ ಸಹಾಯಕರ ಆರೋಗ್ಯವೇ ಹದಗೆಟ್ಟಿದೆ. ಸಾಲ ಸೂಲ ಮಾಡಿ ಕುಟುಂಬ ನಿರ್ವಹಣೆ ಮಾಡಬೇಕಿದೆ. ಮನವಿಗೆ ಸ್ಪಂದಿಸದ ಸರ್ಕಾರದ ಕಣ್ಣು ತೆರೆಸಲು ಸಂಘದ ಕೇಂದ್ರ ಸಭೆಯ ನಿರ್ಣಯದಂತೆ ಈ ತಿಂಗಳಿಂದ ರಾಷ್ಟ್ರೀಯ ಕಾರ್ಯಕ್ರಮಗಳ ವರದಿಯನ್ನು ಇಲಾಖೆಗೆ ಸಲ್ಲಿಸುವುದನ್ನು ಸ್ಥಗಿತಗೊಳಿಸುತ್ತಿದ್ದೇವೆ. ಡಿಸೆಂಬರ್ ತಿಂಗಳಿಂದ ಎಲ್ಲಾ ಕಾರ್ಯಕ್ರಮಗಳ ವರದಿ ನೀಡುವುದನ್ನು ಸ್ಥಗಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಮನವಿ ಸ್ವೀಕರಿಸಿದ ತಹಶೀಲ್ದಾರ್, ಬೇಡಿಕೆಗಳನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತರುವುದಾಗಿ ಹೇಳಿದರು.