ದಾವಣಗೆರೆ: ಅಕ್ರಮವಾಗಿ ಅಕ್ಕಿಯನ್ನು ಸಂಗ್ರಹಿಸಿಡಲಾಗಿದ್ದ ಗೋದಾಮಿನ ಮೇಲೆ ಪೊಲೀಸ್ ಇಲಾಖೆ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಗರದ ಅಣ್ಣಾ ನಗರದಲ್ಲಿ ನಡೆದಿದೆ.
ಸುಮಾರು 260 ಕ್ವಿಂಟಾಲ್ಗೂ ಅಧಿಕ ಅಕ್ಕಿಯನ್ನು ಕರಿಬಸವೇಶ್ವರ ರೈಸ್ ಮಿಲ್ನಲ್ಲಿ ಸಂಗ್ರಹಿಸಿಡಲಾಗಿತ್ತು. ಬೇರೆ ಬೇರೆ ಕಡೆಗಳ ಸೊಸೈಟಿಗಳಿಗೆ ಬಂದ ಅಕ್ಕಿಯನ್ನು ಗೋದಾಮಿನಲ್ಲಿ ದಾಸ್ತಾನು ಮಾಡಿ ಹೊರ ರಾಜ್ಯಗಳಿಗೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.
ಸ್ಥಳದಲ್ಲಿ ಪಂಜಾಬ್ ಮತ್ತಿತರ ರಾಜ್ಯಗಳ ಹೆಸರುಳ್ಳ ಅಕ್ಕಿ ಚೀಲಗಳು ಸಹ ಪತ್ತೆಯಾಗಿದೆ. ಅಕ್ರಮವಾಗಿ ಅಕ್ಕಿ ದಾಸ್ತಾನು ಮಾಡಿರುವ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಉಪ ನಿರ್ದೇಶಕ ಮಂಟೇಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ರೈಸ್ ಮಿಲ್ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ವಶಪಡಿಸಿಕೊಂಡಿರುವ ಅಕ್ಕಿಯ ಮೌಲ್ಯ 4 ಲಕ್ಷ ರೂಪಾಯಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.