ದಾವಣಗೆರೆ: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಕುರಿತು ಚರ್ಚೆ ಮಾಡಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ಜಿಲ್ಲೆಯ ನ್ಯಾಮತಿ ಪಟ್ಟಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿ ಕುರಿತು ನಾನು ಹಾಗೂ ಜಿಲ್ಲೆಯ ಶಾಸಕರು ಬೆಂಗಳೂರಿನಲ್ಲಿ ಹಾಗೂ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿಯ ಎಸ್.ಎ. ರವೀಂದ್ರನಾಥ್ ಮನೆಯಲ್ಲಿ ಸಭೆ ಮಾಡಿದ್ದೇವೆ. ಆದರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಬದಲಾವಣೆ ಮಾಡಬೇಕೆಂಬ ಬಗ್ಗೆ ಸಭೆ ನಡೆಸಿಲ್ಲ ಎಂದು ಹೇಳಿದರು.
ಜಿಲ್ಲೆಗೊಂದು ಸಚಿವ ಸ್ಥಾನ ನೀಡಬೇಕು. ದಾವಣಗೆರೆ ಜಿಲ್ಲೆ ಸಚಿವ ಸ್ಥಾನದಿಂದ ವಂಚಿತವಾಗಿದ್ದು ಸಚಿವ ಸ್ಥಾನ ನೀಡುವಂತೆ ಸಭೆ ಮಾಡಿದ್ದೇವೆ. ಭೈರತಿ ಬಸವರಾಜ್ ಕೋವಿಡ್ ನಿಯಂತ್ರಿಸುವುದರ ಜೊತೆಗೆ ಅಧಿಕಾರಿಗಳೊಂದಿಗೆ ಸಾಕಷ್ಟು ಸಭೆ ಮಾಡಿದ್ದಾರೆ. ಅವರನ್ನು ಬದಲಾವಣೆ ಮಾಡುವಂತೆ ಎಲ್ಲಿಯೂ ಹೇಳಿಲ್ಲ ಎಂದರು.
ಇನ್ನು ಸಿಎಂ ಭೇಟಿ ಮಾಡಿ ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ದೇವೆ. ಈಗಲೂ ಕೂಡ ನಾವು ಜಿಲ್ಲೆಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯ ಮಾಡುತ್ತೇವೆ ಎಂದಿದ್ದಾರೆ.