ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ 5ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಾರ್ಚ್ 9ಕ್ಕೆ ತೀರ್ಪು ಕಾಯ್ದಿರಿಸಿದೆ.
ಕಾಶ್ಮೀರದ ಮೂವರು ವಿದ್ಯಾರ್ಥಿಗಳಿಂದ ದೇಶದ್ರೋಹ ಘೋಷಣೆ ಹಿನ್ನೆಲೆಯಲ್ಲಿ ಜಾಮೀನು ಅರ್ಜಿ ವಿಚಾರಣೆಗೆ ಬೆಂಗಳೂರಿನಿಂದ ಆಗಮಿಸಿದ ವಕೀಲರ ತಂಡ, ಆರೋಪಿಗಳ ಪರ ವಾದ ಮಂಡಿಸಿತು. ಮೈತ್ರೇಯಿ ಕೃಷ್ಣನ್ ನೇತೃತ್ವದ ಹತ್ತು ಜನ ವಕೀಲರ ತಂಡ ದೇಶಾದ್ಯಂತ ಈ ಹಿಂದೆ ನಡೆದ ಹಲವು ದೇಶದ್ರೋಹ ಘೋಷಣೆ ಪ್ರಕರಣಗಳ ಉದಾಹರಣೆಯನ್ನು ಈ ವೇಳೆ ಉಲ್ಲೇಖಿಸಿತ್ತು.
ಇದೇ ಸಂದರ್ಭದಲ್ಲಿ ಸರ್ಕಾರಿ ವಕೀಲೆ ಸುಮಿತ್ರಾ ಅಂಚಟಗೇರಿ ತಕರಾರು ಅರ್ಜಿ ಸಲ್ಲಿಸಿದರು. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 2.45 ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿತ್ತು. ನಂತರ 2-45ರ ಬಳಿಕ ಪ್ರಾರಂಭಗೊಂಡ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶ ಕೆ.ಎನ್. ಗಂಗಾಧರ, ಮಾ.09ಕ್ಕೆ ತೀರ್ಪು ಕಾಯ್ದಿರಿಸಿ ಆದೇಶ ನೀಡಿದರು.