ಧಾರವಾಡ: ಪ್ರಸ್ತುತ ಸಾಲಿಗೆ ವಾಡಿಕೆಗಿಂತ ಹೆಚ್ಚುವರಿ ಮಳೆಯಾದರೆ ಸಮರ್ಥವಾಗಿ ನಿಭಾಯಿಸಲು ಅಗತ್ಯ ಸಿದ್ಧತೆಗಳನ್ನು ಆಯಾ ಇಲಾಖೆ ಅಧಿಕಾರಿಗಳು ಮೇ ಅಂತ್ಯದೊಳಗೆ ಸಿದ್ಧತೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಮಾನ್ಸೂನ್ ಪೂರ್ವ ಸಿದ್ಧತೆ ಸಭೆಯಲ್ಲಿ ಮಾತನಾಡಿದ ಅವರು ಸಣ್ಣ ನೀರಾವರಿ ಇಲಾಖೆ, ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ತಾಲೂಕು ಆಡಳಿತ ಜಂಟಿಯಾಗಿ ಆಯಾ ತಾಲೂಕಿನಲ್ಲಿ ಅಧಿಕ ಮಳೆಯಿಂದಾಗಿ ಕಳೆದ ಸಾಲಿನಲ್ಲಿ ತೊಂದರೆಗೀಡಾದ ಪ್ರದೇಶಗಳನ್ನು ಗುರುತಿಸಿ, ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹೆಚ್ಚು ಮಳೆಯಾದರೆ ಜನರಿಗೆ ವ್ಯವಸ್ಥೆ ಕಲ್ಪಿಸಲು, ಹಾಸ್ಟೆಲ್ ಸಮುದಾಯ ಭವನ, ಕಲ್ಯಾಣ ಮಂಟಪಗಳನ್ನು ಗುರುತಿಸಿ ಪಟ್ಟಿ ಮಾಡಬೇಕು ಕೊರೊನಾ ವೈರಸ್ ನಿಯಂತ್ರಣದ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದ್ದು, ಹೆಚ್ಚು ಸ್ಥಳಾವಕಾಶದ ಅಗತ್ಯತೆ ಇರುತ್ತದೆ ಎಂದು ಅವರು ಹೇಳಿದರು.
ಮಳೆಯಿಂದಾಗಿ ಹಾನಿ, ಅಪಾಯ ಉಂಟಾದಾಗ ತಕ್ಷಣ ನೆರವಿಗೆ ಬರಲು ಅಗ್ನಿಶಾಮಕದಳ ಮಹಾನಗರ ಪಾಲಿಕೆ ಮತ್ತು ತಹಶೀಲ್ದಾರ್ ಕಚೇರಿಗಳಲ್ಲಿ ಸುರಕ್ಷತಾ ಸಾಧನಗಳನ್ನು ಸಿದ್ಧವಾಗಿಡಲು ಜಿಲ್ಲಾಡಳಿತ ಬೋಟ್, ಲೈಫ್ ಜಾಕೆಟ್, ಟಾರ್ಚ್, ವುಡ್ ಕಟರ್ ಸೇರಿದಂತೆ ವಿವಿಧ ಉಪಕರಣಗಳನ್ನು ಪೂರೈಸುತ್ತಿದೆ ಎಂದರು. ಕೆರೆಗಳ ಒತ್ತುವರಿ ತೆರವು ಮಾಡಲು ಭೂದಾಖಲೆಗಳ ಇಲಾಖೆಯಿಂದ ಸರ್ವೇಯರ್ಗಳ ನೆರವು ಪಡೆಯಬೇಕು. ಕುಂದಗೋಳ ಮತ್ತು ನವಲಗುಂದ ತಾಲೂಕುಗಳಲ್ಲಿ ಕಳೆದ ಬಾರಿ ಬೆಣ್ಣೆಹಳ್ಳ ಮತ್ತು ತುಪ್ಪರಿಹಳ್ಳದಿಂದ ಉಂಟಾದ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿ ಈ ಬಾರಿ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕು. ಮಲಪ್ರಭಾ ಬಲದಂಡೆ ಕಾಲುವೆ ಮೂಲಕ ನೀರು ಸರಾಗವಾಗಿ ಹರಿದುಹೋಗಲು ಅಗತ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಿ.ಇ.ಒ. ಡಾ.ಬಿ.ಸಿ. ಸತೀಶ ಮಾತನಾಡಿ, ಅಳ್ನಾವರದ ಹುಲಿಕೆರೆ, ನುಗ್ಗಿಕೇರಿ, ಕೆಲಗೇರಿ, ಉಣಕಲ್, ರಾಮಾಪೂರ, ಹಿರೇಹೊನ್ನಳ್ಳಿ ಕೆರೆಗಳಿಂದ ಅಪಾರ ಪ್ರಮಾಣದ ನೀರು ಬಂದು ಜನವಸತಿ ಪ್ರದೇಶಗಳಿಗೆ ಹಾನಿ ಉಂಟಾಗುತ್ತದೆ. ಸಂಬಂಧಿಸಿದ ಅಧಿಕಾರಿಗಳು ಸುತ್ತಲಿನ ಪ್ರದೇಶಗಳಲ್ಲಿ ಕಾಲುವೆ, ಒಳಚರಂಡಿ, ನಾಲಾಗಳನ್ನು ಸ್ವಚ್ಚಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.