ಧಾರವಾಡ: ವಿವಿಧ ಇಲಾಖೆಗಳಿಂದ ಜಿಲ್ಲೆಯ ರಸ್ತೆ, ಕುಡಿಯುವ ನೀರು, ಮೂಲಭೂತ ಸೌಕರ್ಯಗಳ ನಿರ್ಮಾಣ ಹಾಗೂ ಅಭಿವೃದ್ಧಿಗಾಗಿ ಪ್ರಸಕ್ತ ಸಾಲಿಗೆ ಹಂಚಿಕೆ ಮತ್ತು ಬಿಡುಗಡೆಯಾಗಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ನಿಗದಿತ ಅಭಿವೃದ್ಧಿ ಸಾಧಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಆಯುಕ್ತ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರವಿ ಕುಮಾರ ಸುರಪುರ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಗರಾಭಿವೃದ್ಧಿ ಯೋಜನೆಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ರೈತರಿಗೆ ಇನ್ಪುಟ್ ಸಬ್ಸಿಡಿ, ಬೆಳೆವಿಮಾ ಸೌಲಭ್ಯ, ಮನೆ ಹಾನಿಯಾದವರಿಗೆ ಸಹಾಯಧನ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬೇಸಿಗೆ ಆರಂಭವಾಗುತ್ತಿರುವುದರಿಂದ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಅಭಾವವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ನೀರಿನ ಅಭಾವ ಆಗಲಿರುವ ಸಂಭವನೀಯ ಗ್ರಾಮಗಳ ಪಟ್ಟಿ ಮಾಡಿ, ಯೋಜನೆ ರೂಪಿಸಬೇಕು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಸರ್ಕಾರದ ಎಲ್ಲ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಲಾಗುತ್ತಿದೆ. ಆರೋಗ್ಯ ಇಲಾಖೆಯಿಂದ ಕೋವಿಡ್ ನಿರ್ವಹಣೆ, ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಉತ್ತಮವಾಗಿದೆ. ಹಲವಾರು ಗ್ರಾಮಗಳಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಕಾರ್ಯ ಕೈಗೊಳ್ಳಲಾಗಿದೆ. ಬೇಡಿಕೆ ಇರುವ ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಉಳಿದ ಜನರಿಗೆ ಅಗತ್ಯವಿರುವ ಸ್ಮಶಾನ ಭೂಮಿ ಕಲ್ಪಿಸಲು ಕ್ರಮವಹಿಸಲಾಗಿದೆ.
ಸಂಸತ್ ಸದಸ್ಯರ ಹಾಗೂ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಗಳ ಪ್ರಗತಿಯಾಗಿದ್ದು, ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಲಾಗಿದೆ ಮತ್ತು ಡಿಸಿ ಪಿಡಿ ಖಾತೆಯಲ್ಲಿ ಅನುದಾನ ಲಭ್ಯವಿದ್ದು, ತುರ್ತು ಮತ್ತು ಅಗತ್ಯ ಕಾಮಗಾರಿ ಕೈಗೊಳ್ಳುವ ಬೇಡಿಕೆ ಇದ್ದರೆ ತಾಲೂಕಾವಾರು ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.