ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸ್ ಕಮೀಷನರೇಟ್ನಿಂದ ಆಯೋಜನೆ ಮಾಡಲಾಗಿರುವ ಪ್ರಸಕ್ತ ಸಾಲಿನ ವಾರ್ಷಿಕ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹಾಗು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಲಾಭುರಾಮ್ ಅವರು ಕ್ರೀಡಾ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ, ಕ್ರೀಡೆ ಬದುಕಿನ ಅವಿಭಾಜ್ಯ ಅಂಗವಾಗಬೇಕು. ಶಿಸ್ತಿಗೆ ಹೆಸರಾದ ಪೊಲೀಸ್ ಇಲಾಖೆಯ ಸಾಮರ್ಥ್ಯ ಏನೆಂಬುದು ಲಾಕ್ಡೌನ್ ಸಮಯದಲ್ಲಿ ಸಾಬೀತಾಗಿದೆ. ಕೋವಿಡ್ ಪ್ರಕರಣಗಳು ಹೆಚ್ಚಿದ್ದ ಸಮಯದಲ್ಲಿ ಪೊಲೀಸರು ಶಿಸ್ತಿನಿಂದ ಕೆಲಸ ಮಾಡಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬೇರೆ ಸರ್ಕಾರಿ ನೌಕರರಿಗೆ ಹೋಲಿಸಿದರೆ ಪೊಲೀಸ್ ಸಿಬ್ಬಂದಿಗೆ ಕೆಲಸ ಹೆಚ್ಚು, ಆದರೆ ಸಮಯ ಕಡಿಮೆ. ಈ ಒತ್ತಡದ ಸಮಯದಲ್ಲಿ ಪೊಲೀಸರು ತಮ್ಮ ಆರೋಗ್ಯದ ಬಗ್ಗೆಯೂ ಗಮನ ಹರಿಸಬೇಕು. ಶಿಸ್ತು ಕಾಪಾಡುವವರ ಬದುಕು ಆರೋಗ್ಯವಾಗಿದ್ದರೆ, ಸಮಾಜವು ಸುಂದರವಾಗಿರುತ್ತದೆ ಎಂದರು.
ಬಳಿಕ ಮಾತನಾಡಿದ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಲಾಬುರಾಮ್, ಉತ್ತಮ ದೈಹಿಕ ಕ್ಷಮತೆ ಇದ್ದರಷ್ಟೇ ವೃತ್ತಿ ಬದುಕು ಹಾಗೂ ವೈಯಕ್ತಿಕ ಬದುಕಿನಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ. ಹಾಗಾಗಿ ಪೊಲೀಸರು ದೈಹಿಕ ಸದೃಢತೆಗೆ ಒತ್ತು ಕೊಡಬೇಕು ಎಂದು ಸಲಹೆ ನೀಡಿದರು. ನಿತ್ಯದ ಒತ್ತಡಗಳ ನಡುವೆ ಸಮಯ ಹೊಂದಿಸಿಕೊಂಡು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಬೇಕು. ಕ್ರೀಡೆಯನ್ನು ಜೀವನದ ಭಾಗ ಮಾಡಿಕೊಳ್ಳಬೇಕು. ನಿಯಮಿತವಾಗಿ ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳಬೇಕು ಎಂದರು.
ಓದಿ: ಆರೋಗ್ಯದ ದೃಷ್ಟಿಯಿಂದ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ: ಸಚಿವ ಸೋಮಣ್ಣ ಮನವಿ
ಮೂರು ದಿನ ನಡೆಯುವ ಈ ಕ್ರೀಡಾಕೂಟದಲ್ಲಿ ಆರು ತಂಡಗಳು ಪಾಲ್ಗೊಂಡಿವೆ. ಪ್ರತಿ ಕ್ರೀಡಾ ತಂಡಗಳು ಪ್ರದರ್ಶಿಸಿದ ಪಥ ಸಂಚಲನ ಎಲ್ಲರ ಗಮನ ಸೆಳೆಯಿತು.